ಬೆಂಗಳೂರು : ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ, ‘ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆ’ ಪದಾಧಿಕಾರಿ ಚಾಮರಾಜಪೇಟೆಯ ಶಂಕರ್ ರಿಟ್ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಅರ್ಜಿ ವಿಚಾರಣೆ ನಡೆಸಿ, ‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ನ್ಯಾಯಪೀಠ ಹೇಳಿದೆ.
ಅರ್ಜಿದಾರರು ತಮ್ಮ ಅರ್ಜಿಯಲ್ಲಿ, ಶಬ್ದ ಮಾಲಿನ್ಯ ನಿಯಮಗಳು–2000ಕ್ಕೆ ಅನುಗುಣವಾಗಿ ಅಧಿಕಾರಿಗಳು ಮಾರ್ಗಸೂಚಿಗಳನ್ನು ಹೊರಡಿಸಬೇಕಿತ್ತು. ಅದರ ಬದಲು ಸಾರ್ವತ್ರಿಕವಾಗಿ ಸುತ್ತೋಲೆ ಹೊರಡಿಸಿರುವುದು ನಮ್ಮ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಏಕೆಂದರೆ, ಸೌಂಡ್ ಸಿಸ್ಟಮ್ ಉಪಕರಣಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿರುವಾಗ, ಅವುಗಳ ಬಳಕೆಯನ್ನು ನಿರ್ಬಂಧಿಸುವುದು ಸಮಂಜಸ ಕ್ರಮವಲ್ಲ ಎಂದು ನಿಷೇಧ ಆದೇಶವನ್ನು ಪ್ರಶ್ನಿಸಿದ್ದರು.