ಪೊಲೀಸರ ಸಂಕಷ್ಟ ಭತ್ಯೆ 50% ಏರಿಕೆ: ಡಿಕೆಶಿ

Published : Aug 29, 2026, 09:31 AM IST
Dk Shivakumar

ಸಾರಾಂಶ

ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ‌ಹೇಳಿದರು.

ಬೆಂಗಳೂರು : ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ‌ಹೇಳಿದರು.

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಶುಕ್ರವಾರ ನಡೆದ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿ (ಎನ್‌ಎಸ್‌ಜಿ ವತಿಯಿಂದ 1 ತಿಂಗಳ ವಿಶೇಷ ತರಬೇತಿ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮನ್ನು ರಕ್ಷಿಸಲು ನಮ್ಮ ಆರಕ್ಷಕರನ್ನು ಸಜ್ಜುಗೊಳಿಸುವ ರಾಷ್ಟ್ರೀಯ ಭದ್ರತಾ ಪಡೆಗೆ (ಎನ್ಎಸ್‌ಜಿ) ಧನ್ಯವಾದಗಳು. ಸಜ್ಜನರನ್ನು ರಕ್ಷಿಸುವುದು, ದುರ್ಜನರನ್ನು ಶಿಕ್ಷಿಸುವುದೂ ಧರ್ಮ. ನೀವೆಲ್ಲರೂ ಧರ್ಮದ ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುತ್ತಿದ್ದೀರಿ. ಸಮಾಜದಲ್ಲಿ ಅಶಾಂತಿ, ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ನೀವು ಶಿಷ್ಟರ ರಕ್ಷಣೆಗೆ ಬರುತ್ತೀರಿ ಎಂದರು.

ರಾಷ್ಟ್ರೀಯ ಭದ್ರತಾ ಪಡೆ ತಮ್ಮ ಶಕ್ತಿಯನ್ನು ನಮ್ಮ ರಾಜ್ಯ ಪೊಲೀಸರಿಗೆ ಧಾರೆ ಎರೆಯುತ್ತಿದೆ. ಎನ್‌ಎಸ್‌ಜಿಯಿಂದ ಪಡೆದ ತರಬೇತಿ ಸಾರ್ಥಕವಾಗಬೇಕು. ಅದನ್ನು ನಾಡಿನ, ಜನರ ರಕ್ಷಣೆಗೆ ಬಳಸಬೇಕು. ಎನ್‌ಎಸ್‌ಜಿ ತರಬೇತಿ ನಮ್ಮ ಪೊಲೀಸರ ಸಾಮರ್ಥ್ಯ ಹೆಚ್ಚಿಸುತ್ತದೆ ಜತೆಗೆ ಕೌಶಲ್ಯವಂತರನ್ನಾಗಿ ಮಾಡುತ್ತದೆ ಎಂದರು.

ದೇಶದ ಹೆಮ್ಮೆ:

ಕರ್ನಾಟಕ ಪೊಲೀಸ್ ದೇಶದ ಹೆಮ್ಮೆ. ನಮ್ಮ ಪೊಲೀಸರು ದಕ್ಷತೆಗೆ, ಕಾರ್ಯಪರತೆಗೆ, ಕರ್ತವ್ಯ ನಿಷ್ಠೆಗೆ ಹೆಸರಾದವರು. ನಾವು ಹುಟ್ಟಿದ ಈ ಸಮಾಜಕ್ಕೆ ಋಣ ತೀರಿಸುವುದೇ ನಿಜವಾದ ಸೇವೆ. ಆ ಕೆಲಸವನ್ನು ನೀವು ಬಹಳ ಚೆನ್ನಾಗಿ ಮಾಡುತ್ತಿದ್ದೀರಿ. ಕಷ್ಟದ ಸಂದರ್ಭದಲ್ಲಿ ನೀವು ನಿಮ್ಮ ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿ ನಾಡು ರಕ್ಷಣೆ ಮಾಡುತ್ತಿದ್ದೀರಿ. ನಮ್ಮ ಆರಕ್ಷಕರು, ಕಾನೂನಿನ ಪಾಲಕರು, ಕಾನೂನಿನ ರಕ್ಷಕರು ಎಂದು ಶ್ಲಾಘಿಸಿದರು.

ನಾನು ಈ ಹಿಂದೆ ಬಂಧಿಖಾನೆ ಸಚಿವನಾಗಿದ್ದಾಗ ಸಾಕಷ್ಟು ಮಾಹಿತಿ ಪಡೆದಿದ್ದೆ. ಹಗಲು, ರಾತ್ರಿ ನೀವು ಶ್ರಮಿಸುತ್ತೀರಿ. ಕೆಲವು ದುರ್ಘಟನೆ ಸಂದರ್ಭದಲ್ಲಿ ನಾವು ರಾಜಕಾರಣಿಗಳು ನಿಮ್ಮನ್ನೇ ದೂಷಿಸಿರುವ ಉದಾಹರಣೆಗಳಿವೆ. ನೀವು ನಿಮ್ಮ ನಿಷ್ಠೆ, ಪ್ರಾಮಾಣಿಕತೆಯಲ್ಲಿ ದೇಶದ ಸಮಗ್ರತೆ, ಐಕ್ಯತೆ, ಶಾಂತಿ ಕಾಪಾಡುವುದು ಮುಖ್ಯ ಎಂದು ತಿಳಿಸಿದರು.

ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ:

ಗಡಿಯಲ್ಲಿ ಸೈನಿಕ. ಗಡಿ ಒಳಗೆ ಆರಕ್ಷಕ. ನೀವಿದ್ದರೆ ಸಮಾಜ ನೆಮ್ಮದಿ, ಸುಖವಾಗಿರುತ್ತದೆ. ನೀವು ನಿಮ್ಮ ಕರ್ತವ್ಯವನ್ನು ಪ್ರೀತಿಯಿಂದ ಒಪ್ಪಿ ಈ ಇಲಾಖೆ ಸೇರಿದ್ದೀರಿ. ಕೆಲವರು ಪೊಲೀಸ್ ಕೆಲಸವನ್ನು ಹೆಣ ಕಾಯುವ ಕೆಲಸ ಎಂದು ಟೀಕಿಸುತ್ತಾರೆ. ಆದರೆ ನೀವು ದೇಶ ಸೇವೆ ಮಾಡುತ್ತಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಲಿಪ್ಯಾಡ್ ನಿರ್ಮಾಣ:

ಬೆಂಗಳೂರು ನಗರದಲ್ಲಿ ಗಗನಚುಂಬಿ ಕಟ್ಟಡ ನಿರ್ಮಾಣ ಹೆಚ್ಚಾಗುತ್ತಿವೆ. ಬೆಂಕಿ ಅನಾಹುತ, ಭಯೋತ್ಪಾದನೆ ದಾಳಿಗಳು ಸಂಭವಿಸಿದರೆ ನಾಗರಿಕರ ರಕ್ಷಣೆ ನಮ್ಮ ಕರ್ತವ್ಯ. ಇಂಥ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಹೆಲಿಪ್ಯಾಡ್‌ಗಳನ್ನು ಬಳಸಿಕೊಳ್ಳುವ ವಿಚಾರವಾಗಿ ನಮ್ಮ ಸರ್ಕಾರ ಮಿಲಿಟರಿ, ವಾಯು ಸೇನಾ ಅಧಿಕಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮಾತುಕತೆಯನ್ನು ಗೃಹಚಿವರು ನಡೆಸಲಿದ್ದಾರೆ. ಗಗನ ಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣಕ್ಕೆ ಅಗತ್ಯ ಸ್ಥಳ ಒದಗಿಸಬೇಕು. ಕಾನೂನು ಚೌಕಟ್ಟಿನಲ್ಲಿ ಅನುಮತಿ ನೀಡುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ನುಡಿದರು.

ರಕ್ಷಣೆ ನೀಡುವುದು ನಮ್ಮ ಕರ್ತವ್ಯ:

ಡಿಜಿಟಲ್ ಕ್ರೈಂಗಳು ಹೆಚ್ಚುತ್ತಿವೆ. ನಾವು ಅಪ್‌ಡೇಟ್ ಆಗಬೇಕು. ರಾಜ್ಯದ ಜನಸಂಖ್ಯೆ 7 ಕೋಟಿಯಾಗಿದೆ. 2 ಲಕ್ಷ ವಿದೇಶಿಗರು ನಮ್ಮನ್ನು ನಂಬಿ ಇಲ್ಲಿದ್ದಾರೆ. ವಿಶ್ವದ ಅತ್ಯುತ್ತಮ ಕಂಪನಿಗಳು ಇಲ್ಲೇ ಕಾರ್ಯನಿರ್ವಹಿಸುತ್ತಿವೆ. ಎಲ್ಲದಕ್ಕೂ ಕಾರಣ ನಂಬಿಕೆ, ವಿಶ್ವಾಸ. ನಮ್ಮನ್ನು ನಂಬಿ ಇಲ್ಲಿಗೆ ಬಂದಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ. ಗೃಹ ಇಲಾಖೆ, ಪೊಲೀಸ್ ಇಲಾಖೆ ಒಟ್ಟಿಗೆ ಆ ಕೆಲಸವನ್ನು ಈಗಾಗಲೇ ಸಮರ್ಥವಾಗಿ ಮಾಡುತ್ತಿದೆ ಎಂದು ಹೇಳಿದರು.

ಒಂದು ತರಬೇತಿ ಕಾರ್ಯಕ್ರಮವಲ್ಲ:

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಇಂದಿನ ಬದಲಾಗುತ್ತಿರುವ ಅಪರಾಧ ಮತ್ತು ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಪೊಲೀಸ್‌ ಪಡೆ ನಿರಂತರವಾಗಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಹೊಸ ಅಪರಾಧಗಳಿಗೆ ಹಳೆಯ ವಿಧಾನಗಳಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಹೊಸ ಜ್ಞಾನ, ಆಧುನಿಕ ತಂತ್ರಜ್ಞಾನ ಹಾಗೂ ನಿರಂತರ ತರಬೇತಿ ಮೂಲಕ ಪೊಲೀಸ್‌ ಪಡೆಯನ್ನು ಭವಿಷ್ಯದ ಸವಾಲುಗಳಿಗೆ ಸನ್ನದ್ಧಗೊಳಿಸಬೇಕು. ಎನ್‌ಎಸ್‌ಜಿಯಂಥ ದೇಶದ ಅತ್ಯುನ್ನತ ಭದ್ರತಾ ಸಂಸ್ಥೆಯ ಸಹಯೋಗದೊಂದಿಗೆ ನಡೆದ ಇಂತಹ ತರಬೇತಿ ಕಾರ್ಯಕ್ರಮ ಕೇವಲ ಒಂದು ತರಬೇತಿ ಕಾರ್ಯಕ್ರಮವಲ್ಲ. ಇದು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಭವಿಷ್ಯದ ಸವಾಲುಗಳಿಗೆ ಸಿದ್ಧಗೊಳಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎನ್‌.ಎ.ಹ್ಯಾರಿಸ್‌, ಎನ್‌ಎಸ್‌ಜಿ ಡಿ.ಜಿ ಭೃಗು ಶ್ರೀನಿವಾಸನ್‌, ಡಿಜಿಪಿ ಡಾ.ಎಂ.ಎ.ಸಲೀಂ ಸೇರಿ ಮತ್ತಿತರರು ಇದ್ದರು.

ಪ್ರತ್ಯೇಕ ರೌಡಿ ನಿಗ್ರಹ ಪಡೆ

ಪೊಲೀಸರಿಗೆ ಹೆಚ್ಚಿನ ವಸತಿ ವ್ಯವಸ್ಥೆ ಹಾಗೂ ಅವರ ಮೇಲಿರುವ ಒತ್ತಡ ಕಡಿಮೆ ಮಾಡುವುದು ನಮ್ಮ ಕರ್ತವ್ಯ. ಆ ಕೆಲಸ ಶೀಘ್ರದಲ್ಲೇ ಮಾಡುತ್ತೇವೆ. ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ರೌಡಿ ನಿಗ್ರಹ ಪಡೆ ರಚಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದೇವೆ. ಈ ತಂಡ ಯಾವ ರಾಜಕೀಯ ಒತ್ತಡಕ್ಕೂ ಮಣಿಯದೆ ಜನರಿಗೆ ಭದ್ರತೆ, ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಇನ್ನೂ 40-50 ತಾಲೂಕುಗಳು ಬರಪೀಡಿತ ವ್ಯಾಪ್ತಿಗೆ: ಪರಂ
ಬರ: ತಮ್ಮ ತಾಲೂಕು ಸೇರಿಸದ್ದಕ್ಕೆ ಹಲವೆಡೆ ಪ್ರತಿಭಟನೆ