ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು

Sujatha NR | Published : Jun 18, 2025 11:42 AM

ಕೆಎಸ್ಸಾರ್ಟಿಸಿಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರ ಭಾಗವಾಗಿ 2 ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗೆ ನೇಮಕವಾದ ಅಭ್ಯರ್ಥಿಗಳಿಗೆ ಸ್ಥಳ ನಿಯೋಜನಾ ಆದೇಶ ವಿತರಿಸಲಾಗಿದೆ

  ಬೆಂಗಳೂರು :  ಕೆಎಸ್ಸಾರ್ಟಿಸಿಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರ ಭಾಗವಾಗಿ 2 ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗೆ ನೇಮಕವಾದ ಅಭ್ಯರ್ಥಿಗಳಿಗೆ ಸ್ಥಳ ನಿಯೋಜನಾ ಆದೇಶ ವಿತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿಯೋಜನಾ ಆದೇಶ ವಿತರಿಸಿ ಮಾತನಾಡಿದ ಅವರು, ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿಯನ್ನು ಮಾನವ ಹಸ್ತಕ್ಷೇಪವಿಲ್ಲದೆ ಪಾರದರ್ಶಕವಾಗಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಹೊಸದಾಗಿ ನೇಮಕವಾಗಿರುವ ಸಿಬ್ಬಂದಿ ಮಹಿಳಾ ಪ್ರಯಾಣಿಕರು, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅಪಘಾತ ಸಂಭವಿಸದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಕೆಎಸ್ಸಾರ್ಟಿಸಿ ಸೇರಿದಂತೆ ನಾಲ್ಕೂ ನಿಗಮಗಳಲ್ಲಿ 1 ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ನೇಮಕ ಮಾಡಲಾಗಿದೆ. ಅದರ ಜತೆಗೆ ಖಾಲಿ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ 9 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು, ಈಗಾಗಲೇ 7,500 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಅದರಲ್ಲೂ ಕಳೆದ 8 ವರ್ಷಗಳಿಂದ ನಿಗಮಗಳಲ್ಲಿ ನೇಮಕಾತಿ ಪ್ರಕ್ರಿಯೆಯೇ ಸ್ಥಗಿತಗೊಂಡಿತ್ತು. ಇದೀಗ ಅದಕ್ಕೆ ಮರು ಚಾಲನೆ ನೀಡಲಾಗಿದ್ದು, ನಿಗಮಗಳ ಮೂಲಕ ಸುಗಮ ಸೇವೆ ನೀಡಲು ಅನುಕೂಲವಾಗಲಿದೆ ಎಂದರು.

ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌, ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ನಿರ್ದೇಶಕರಾದ ಡಾ. ನಂದಿನಿ ದೇವಿ, ಇಬ್ರಾಹಿಂ ಮೈಗೂರ ಇತರರಿದ್ದರು.

Read more Articles on