ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಮಳೆ ಅಬ್ಬರಕ್ಕೆ 3 ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್ : ಉಡುಪಿ ಶಾಲೆಗಳಿಗಿದೆ ರಜೆ

Sujatha NR | Published : Jun 12, 2025 7:17 AM

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಗುರುವಾರ ಮಳೆ ಸಾಧ್ಯತೆ ಹೆಚ್ಚಾಗಿರುವುರಿಂದ ಮುಂಜಾಗ್ರತ ಕ್ರಮವಾಗಿ ಕೊಡಗು, ಚಿಕ್ಕಮಗಳೂರು, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ.

ಹುಬ್ಬಳ್ಳಿ, ಧಾರವಾಡ, ಕೊಡಗು, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೀದರ್‌, ಹಾವೇರಿ, ಉತ್ತರ ಕನ್ನಡ, ಗದಗ, ದಾವಣಗೆರೆ ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಮಳೆಗೆ 4 ಜಾನುವಾರು ಸಾವನ್ನಪ್ಪಿವೆ. 2 ಮನೆಗಳು ಹಾನಿಗೀಡಾಗಿವೆ.

ಇನ್ನೂ ಬೀದರ್‌ನಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಮಳೆಗೆ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಆವರಣ ಸಂಪೂರ್ಣ ಜಲಾವೃತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಹಾಗೂ ನರಸಿಂಹರಾಜಪುರ ತಾಲೂಕುಗಳಲ್ಲಿ ಭಾರಿ ಮಳೆಯಾಗಿದ್ದು, ಕಡೂರು ಹಾಗೂ ತರೀಕೆರೆ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಜೂ.13 ಮತ್ತು 14 ರಂದು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆಯಾಗಿದ್ದು, ಗುರುವಾರದಿಂದ 3 ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಳವಾಗಿದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Read more Articles on