ಕೆ.ಆರ್.ಪುರ- ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಗೆ ₹450 ಕೋಟಿ : ಕೃಷ್ಣ ಬೈರೇಗೌಡ

Published : Jul 26, 2026, 10:17 AM IST
Krishna byregowda

ಸಾರಾಂಶ

ಪ್ರಮುಖ ಐಟಿ ಬಿಟಿ ಕಂಪನಿಗಳಿರುವ ಕೆ.ಆರ್.ಪುರ- ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಯನ್ನು (ಒಆರ್‌ಆರ್) ₹450 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

 ಬೆಂಗಳೂರು :  ಪ್ರಮುಖ ಐಟಿ ಬಿಟಿ ಕಂಪನಿಗಳಿರುವ ಕೆ.ಆರ್.ಪುರ- ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಯನ್ನು (ಒಆರ್‌ಆರ್) ₹450 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್‌ಆರ್‌ಸಿಎ), ಐಟಿ ಪಾರ್ಕ್ ಮಾಲೀಕರು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಶನಿವಾರ ಸಮಾಲೋಚನಾ ಸಭೆ ನಡೆಸಿ ಮಾತನಾಡಿ, ಪ್ರಮುಖ ಜಂಕ್ಷನ್‌ಗಳು, ಸರ್ವಿಸ್ ರಸ್ತೆಗಳು, ಪಾದಚಾರಿ ಮಾರ್ಗಗಳು, ಮೆಟ್ರೋ ಕಾಮಗಾರಿಗಳು, ಮಳೆನೀರು ಚರಂಡಿಗಳು, ಸಾರ್ವಜನಿಕ ಸಾರಿಗೆ ಸಂಪರ್ಕ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಒಆರ್‌ಆರ್ ದೇಶದ ಆರ್ಥಿಕತೆಗೆ ಮತ್ತು ಐಟಿ ಕ್ಷೇತ್ರದ ಅಭಿವೃದ್ಧಿ ಪ್ರಮುಖ ಮಾರ್ಗ. ಆದರೆ, ಕಳೆದ 30-40 ವರ್ಷಗಳಿಂದ ಅನಧಿಕೃತ ಹಾಗೂ ನಿಯಮಬಾಹಿರವಾಗಿ ಲೇಔಟ್‌ಗಳು ಮತ್ತು ಕಟ್ಟಡಗಳು ನಿರ್ಮಾಣಗೊಂಡ ಕಾರಣ ಅದ್ವಾನವಾಗಿದೆ. ಸಮರ್ಪಕ ರಸ್ತೆ, ಒಳಚರಂಡಿ ಮತ್ತು ಪಾದಚಾರಿ ಮಾರ್ಗಗಳ ಅಭಾವ ಎದುರಾಗಿದೆ. ಈ ಭಾಗದಲ್ಲಿನ ವಸತಿ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಶೇ.8ರಷ್ಟು ಜಾಗ ಮಾತ್ರ ರಸ್ತೆ ಮತ್ತು ಮೂಲಸೌಕರ್ಯಗಳಿಗೆ ಲಭ್ಯವಿದೆ ಎಂದು ಸಚಿವರು ತಿಳಿಸಿದರು.

ಅಕ್ರಮ ಕಟ್ಟಡಗಳಿಂದ ಪಾರ್ಕಿಂಗ್ ಜಾಗವಿಲ್ಲದೆ ವಾಹನಗಳು ರಸ್ತೆಯಲ್ಲೇ ನಿಲ್ಲಿಸಲಾಗುತ್ತದೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ. ಕೇವಲ ರಸ್ತೆಯ ಮೇಲ್ಮೈ ಸರಿಪಡಿಸುವುದರಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಮೂಲಸೌಕರ್ಯ ವ್ಯವಸ್ಥೆಯನ್ನು ಸರಿಪಡಿಸುವುದು ಒಆರ್‌ಆರ್ ಸಮಗ್ರ ಅಭಿವೃದ್ಧಿಯ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

ನಗರದಲ್ಲಿ 2 ಸಾವಿರ ಕೋಟಿ. ರು ವೆಚ್ಚದಲ್ಲಿ 260 ಕಿ.ಮೀ ರಾಜಕಾಲುವೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಪೂರ್ವ ಪಾಲಿಕೆ ವ್ಯಾಪ್ತಿಯಲ್ಲಿ 400 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆದಿದೆ ಎಂದು ಸಚಿವರು ತಿಳಿಸಿದರು.

ಜಂಕ್ಷನ್‌ಗಳ ವೈಜ್ಞಾನಿಕ ಅಭಿವೃದ್ಧಿ

ರಿಂಗ್ ರಸ್ತೆಯಲ್ಲಿನ ಪ್ರತಿಯೊಂದು ಜಂಕ್ಷನ್ ಭಿನ್ನವಾಗಿವೆ. ಹೀಗಾಗಿ, ಅಲ್ಲಿನ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ವಿನ್ಯಾಸಗಳನ್ನು ರೂಪಿಸಿ ಫ್ರಿ ಲೆಫ್ಟ್ ಟರ್ನ್, ಯು ಟರ್ನ್ ಸೇರಿದಂತೆ ಹೊಸ ಪ್ರಯೋಗಗಳನ್ನು ಮಾಡುವ ಉದ್ದೇಶವಿದೆ. 3 ತಿಂಗಳ ಅವಧಿಗೆ ಪ್ರಯೋಗಾತ್ಮಕವಾಗಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ. ಅದು ಯಶಸ್ವಿಯಾದರೆ ಮುಂದುವರೆಸಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮುಂದಿನ ವರ್ಷಕ್ಕೆ ಮೆಟ್ರೋ ಸಂಚಾರ

ಸೆಂಟ್ರಲ್ ಸಿಲ್ಕ್‌ಬೋರ್ಡ್‌ನಿಂದ ಕೆ.ಆರ್.ಪುರವರೆಗಿನ ಮೆಟ್ರೋ ರೈಲು ಮಾರ್ಗವನ್ನು ಮುಂದಿನ ವರ್ಷದ ವೇಳೆಗೆ ಪೂರ್ಣಗೊಳಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಮೆಟ್ರೋ ಮಾರ್ಗದುದ್ದಕ್ಕೂ ಸ್ಕೈವಾಕ್ ಹಾಗೂ ನಿಲ್ದಾಣಗಳಿಗೆ ಬಸ್ ಸಂಪರ್ಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಜಗತ್ತಿನ ಪ್ರಮುಖ ಐಟಿ ಕಂಪನಿಗಳಿರುವ ಔಟರ್ ರಿಂಗ್ ರಸ್ತೆಯನ್ನು ಮಾದರಿಯಾಗಿ, ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಮೆಟ್ರೋ ಕಾಮಗಾರಿ ಮುಗಿಯುತ್ತಿದ್ದಂತೆ ಕೆಲಸ ಕೈಗೆತ್ತಿಕೊಳ್ಳಲಾಗುತ್ತದೆ.

- ಕೃಷ್ಣ ಬೈರೇಗೌಡ, ಬೆಂಗಳೂರು ನಗರಾಭಿವೃದ್ಧಿ ಸಚಿವ

ಯೋಜನೆಯ ಪ್ರಮುಖಾಂಶಗಳು

- ಫ್ಲೈಓವರ್ ಕೆಳಭಾಗಗಳು, ಜಂಕ್ಷನ್‌ಗಳಲ್ಲಿ ಖಾಲಿ ಜಾಗಗಳಲ್ಲಿ ಕಿರು ಉದ್ಯಾನ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ.

- ವಾಹನ ಸಂಚಾರ ಕಡಿಮೆ ಇರುವ ಕಡೆ ಸೈಕಲ್ ಟ್ರ್ಯಾಕ್ ಮತ್ತು ಪ್ರತ್ಯೇಕ ಬಸ್ ಬೇ ನಿರ್ಮಾಣ.

- ರಸ್ತೆಗಳನ್ನು ದಾಟಲು ಪಾದಚಾರಿಗಳಿಗೆ ಫುಟ್‌ ಓವರ್ ಬ್ರಿಡ್ಜ್ ನಿರ್ಮಾಣ.

- ಕನಿಷ್ಠ 10 ಅಡಿ ಅಗಲ ಇರುವ ಪಾದಚಾರಿ ಮಾರ್ಗ ನಿರ್ಮಾಣ.

- ರಸ್ತೆ ಸೇರಿದಂತೆ ಸಾರ್ವಜನಿಕ ಸ್ವತ್ತುಗಳ ಅತಿಕ್ರಮಣ ತೆರವು ಕಾರ್ಯಕ್ಕಾಗಿ ಸರ್ವೇ ನಡೆಸಲಾಗುತ್ತದೆ.

- ಜಂಕ್ಷನ್‌ಗಳ ಮರುವಿನ್ಯಾಸ, ಸಿಗ್ನಲ್ ಸಮನ್ವಯ, ಯು-ಟರ್ನ್ ವ್ಯವಸ್ಥೆ ಹಾಗೂ ಸರ್ವಿಸ್ ರಸ್ತೆಗಳ ಸುಧಾರಣೆ.

- ರಸ್ತೆ ಜಲಾವೃತವಾಗದಂತೆ ಚರಂಡಿ, ರಾಜಕಾಲುವೆಗಳ ಅಭಿವೃದ್ಧಿ.

- ರಸ್ತೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಶೌಚಗೃಹಗಳ ನಿರ್ಮಾಣ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪಶುವೈದ್ಯ ನೇಮಕ ಅಕ್ರಮದಲ್ಲೂ ಶಿವಶಂಕರಪ್ಪ ಸಾಹುಕಾರ್‌ ಎ-1!
ರಾಮೋಹಳ್ಳಿ ಗೇಟ್‌ನಲ್ಲಿ ನಿರ್ಮಿಸಿದ ರಸ್ತೆ ಕೆಳಸೇತುವೆ ಉದ್ಘಾಟಿಸಿದ ವಿ.ಸೋಮಣ್ಣ