ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಪ್ರಶ್ನೆಪತ್ರಿಕೆ ರವಾನೆ - ಮಧ್ಯವಾರ್ಷಿಕ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಕ್ರಮ

Published : Sep 28, 2024, 10:18 AM IST
sslc exam

ಸಾರಾಂಶ

ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ   ಪರೀಕ್ಷಾ ಕೇಂದ್ರಕ್ಕೆ ಒಂದು ದಿನ ಮೊದಲು ಇ-ಮೇಲ್ ಮಾಡುವ ಬದಲು ಪರೀಕ್ಷೆಯ ದಿನ ಬೆಳಗ್ಗೆ 6 ಗಂಟೆಗೆ ಇ-ಮೇಲ್ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ಬೆಂಗಳೂರು :  ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆಗೆ ಮೊದಲೇ ಸೋರಿಕೆಯಾಗಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಒಂದು ದಿನ ಮೊದಲು ಇ-ಮೇಲ್ ಮಾಡುವ ಬದಲು ಪರೀಕ್ಷೆಯ ದಿನ ಬೆಳಗ್ಗೆ 6 ಗಂಟೆಗೆ ಇ-ಮೇಲ್ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ಸೆ.25ರಂದು ನಡೆದ ದ್ವಿತೀಯ ಭಾಷಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಮಂಡಳಿ ಈ ಕ್ರಮ ಕೈಗೊಂಡಿದೆ.

ಪರೀಕ್ಷಾ ಕೇಂದ್ರಗಳಿಗೆ ಬೆಳಗ್ಗೆ 6 ಗಂಟೆಗೆ ಇ ಮೇಲ್ ಮಾಡಲಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು ಮುದ್ರಿಸಿ ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ವಿತರಿಸಬೇಕು. ಯಾವುದೇ ಅವ್ಯವಹಾರ, ಅಕ್ರಮ ಆಗದಂತೆ ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪೊಲೀಸ್ ಠಾಣೆಗೆ ದೂರು: ಇದು ಶಾಲಾ ಹಂತದಲ್ಲಿ ನಡೆಯುವ ಪರೀಕ್ಷೆ. ಮೊದಲ ಬಾರಿ ಮಂಡಳಿಯಿಂದ ಪ್ರಶ್ನೆಪತ್ರಿಕೆ ನೀಡಲಾಗಿದೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಯ ಮೂಲ ಗೊತ್ತಾಗಿಲ್ಲ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗುತ್ತದೆ ಎಂದು ಮಂಡಳಿಯ ನಿರ್ದೇಶಕ ಗೋಪಾಲಕೃಷ್ಣ ತಿಳಿಸಿದ್ದಾರೆ.

ಎಚ್ಚರಿಕೆ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು, ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು, ಪರೀಕ್ಷಾ ಕೇಂದ್ರಗಳಲ್ಲಿ ಚೀಟಿಗಳನ್ನು ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ.

ಖಾಸಗಿ ಶಾಲೆಗಳ ಒಕ್ಕೂಟ ವಿರೋಧ:

ಮಂಡಳಿಯಿಂದ ನಡೆಸುತ್ತಿರುವ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಹೊಸ ಪದ್ಧತಿಯ ಪರೀಕ್ಷೆಯನ್ನು ರದ್ದು ಮಾಡಿ ಹಳೇ ಮಾದರಿಯಲ್ಲೇ ಪರೀಕ್ಷೆ ನಡೆಸಬೇಕೆಂದು ಕರ್ನಾಟಕ ಖಾಸಗಿ ಶಾಲಾ- ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಬಿ.ಎನ್. ಯೋಗಾನಂದ ಒತ್ತಾಯಿಸಿದ್ದಾರೆ. ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಸೆ.24ರಿಂದ ಅ.1ರ ವರೆಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಯುತ್ತಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ