ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಆದರೆ, ದೇಶದ ಭದ್ರತೆಗೆ ಧಕ್ಕೆ ತಂದಿರುವ ವಿಚಾರದ ಕುರಿತು ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು
ಬೆಂಗಳೂರು : ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಆದರೆ, ದೇಶದ ಭದ್ರತೆಗೆ ಧಕ್ಕೆ ತಂದಿರುವ ವಿಚಾರದ ಕುರಿತು ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ಆಘಾತವುಂಟು ಮಾಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ. ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು. ಅದರ ಕುರಿತು ಕಾರ್ಯತಂತ್ರ ರೂಪಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚಿಸಬೇಕು. ದೇಶ ರಕ್ಷಣೆ ನಮ್ಮ ಮೊದಲ ಆದ್ಯತೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.
ಉಗ್ರರ ದಾಳಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಇನ್ನು, ಕರ್ನಾಟಕದವರು ಕಾಶ್ಮೀರದಲ್ಲಿ ಸಿಲುಕಿರುವ ವಿಚಾರ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಿದ್ದಾರೆ. ಅಲ್ಲಿರುವವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದರು.