ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಮೂರು ಸ್ಥಳಗಳ ಪೈಕಿ ಎರಡು ಸ್ಥಳಗಳಿಗೆ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರ (ಎಎಐ)ದ ಉನ್ನತ ಮಟ್ಟದ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಬೆಂಗಳೂರು : ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಮೂರು ಸ್ಥಳಗಳ ಪೈಕಿ ಎರಡು ಸ್ಥಳಗಳಿಗೆ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರ (ಎಎಐ)ದ ಉನ್ನತ ಮಟ್ಟದ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕಾಗಿ ಕನಕಪುರ ರಸ್ತೆಯಲ್ಲಿ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯಲ್ಲಿ ಜಾಗ ಗುರುತಿಸಲಾಗಿದೆ. ಆ ಜಾಗಗಳಲ್ಲಿ ಯಾವುದು ಸೂಕ್ತ ಎಂಬುದನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಲು ಎಎಐ ತಂಡ ಮಂಗಳವಾರ ಕನಕಪುರ ರಸ್ತೆಯ ಎರಡು ಜಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಎಎಐ ತಂಡದಲ್ಲಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕ ವಿಕ್ರಂ ಸಿಂಗ್, ಜಂಟಿ ಪ್ರಧಾನ ವ್ಯವಸ್ಥಾಪಕ ಕೆ. ಶ್ರೀನಿವಾಸ ರಾವ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿ ಅಧಿಕಾರಿಗಳಾದ ಸಚ್ಛಿದಾನಂದ, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.
ಈ ತಂಡವು ಬುಧವಾರ ನೆಲಮಂಗಲದ ಕುಣಿಗಲ್ ರಸ್ತೆಯಲ್ಲಿರುವ ಜಾಗವನ್ನು ಪರಿಶೀಲನೆ ನಡೆಸಲಾಗುತ್ತದೆ. ಅದಾದ ನಂತರ ಎಎಐ ತಂಡವು ದೆಹಲಿಗೆ ತೆರಳಿ, ಸ್ಥಳ ಪರಿಶೀಲನೆ ಸೇರಿದಂತೆ ಇನ್ನಿತರ ತಾಂತ್ರಿಕ ಮಾಹಿತಿಯನ್ನಾಧರಿಸಿ ವಿಮಾನನಿಲ್ದಾಣ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬ ಬಗ್ಗೆ ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.
ಕನಕಪುರ ರಸ್ತೆಯ ಸ್ಥಳಗಳನ್ನು ಪರಿಶೀಲಿಸಿದ ತಂಡವು ನಂತರ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು. ಈ ವೇಳೆ ಎಂ.ಬಿ. ಪಾಟೀಲ್, ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯವನ್ನು ಎಎಐ ತಂಡದ ಸದಸ್ಯರಿಗೆ ವಿವರಿಸಿದರು.