1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌

Published : May 13, 2025, 12:36 PM IST
Meghana

ಸಾರಾಂಶ

1971ರ ಭಾರತ- ಪಾಕಿಸ್ತಾನ ಯುದ್ಧದ ವೇಳೆ ಪಾಕಿಸ್ತಾನದ ಮೇಲೆ ದಾಳಿ ನಡೆಸುವ ಏರ್‌ಕ್ರಾಫ್ಟ್‌ಗಳನ್ನು ನಾವು ಸಜ್ಜುಗೊಳಿಸಿ ನೀಡುತ್ತಿದ್ದೆವು-ಹಸನ್‌

ಸಂದೀಪ್‌ ವಾಗ್ಲೆ

 ಮಂಗಳೂರು : ‘1971ರ ಭಾರತ- ಪಾಕಿಸ್ತಾನ ಯುದ್ಧದ ವೇಳೆ ಪಾಕಿಸ್ತಾನದ ಮೇಲೆ ದಾಳಿ ನಡೆಸುವ ಏರ್‌ಕ್ರಾಫ್ಟ್‌ಗಳನ್ನು ನಾವು ಸಜ್ಜುಗೊಳಿಸಿ ನೀಡುತ್ತಿದ್ದೆವು. ಒಂದು ಸಂದರ್ಭದಲ್ಲಂತೂ ನಮ್ಮ ವಾಯು ನೆಲೆ ಮೇಲೆ ವೈರಿ ರಾಷ್ಟ್ರದ ವೈಮಾನಿಕ ದಾಳಿ ನಡೆದಿತ್ತು. ಆದರೆ ಯಾವುದೇ ಸಾವು ನೋವಿಲ್ಲದೆ ಪಾರಾಗಿದ್ದೆವು.

 ಯುದ್ಧದ ಸಂದರ್ಭವೆಂದರೆ ಕಷ್ಟದ ನಡುವೆಯೂ ವೈರಿ ರಾಷ್ಟ್ರವನ್ನು ಸದೆಬಡಿಯುವ ಉತ್ಸಾಹ ಇರುತ್ತಿತ್ತು’.

ಭಾರತೀಯ ವಾಯುಪಡೆಯಲ್ಲಿ ಏರ್‌ಕ್ರಾಫ್ಟ್‌ ಮೆಕ್ಯಾನಿಕ್‌ ಆಗಿ 1971ರ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡು ಪ್ರಸ್ತುತ ಉಡುಪಿಯ ಉಚ್ಚಿಲದಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಹಸನ್‌ ಸಾಹೇಬ್‌ ಅವರ ಮಾತುಗಳಿವು. 20 ವರ್ಷ ಪ್ರಾಯದಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾದೆ. ಅಲ್ಲಿ ಏರ್‌ಕ್ರಾಫ್ಟ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಟ್ರೈನಿಂಗ್‌ ದೊರೆತು ದೇಶದ ವಿವಿಧ ವಾಯುನೆಲೆಗಳಲ್ಲಿ ಸೇವೆ ಸಲ್ಲಿಸಿದೆ. ಭಾರತ- ಪಾಕಿಸ್ತಾನ ಯುದ್ಧದ ಸಂದರ್ಭ ನಮ್ಮ ತಂಡವನ್ನು ಪ್ರಮುಖ ವಾಯುನೆಲೆಗಳಲ್ಲಿ ಒಂದಾದ ಸಿರ್ಸಾಕ್ಕೆ ನಿಯೋಜಿಸಲಾಯಿತು.

ನಾವು ಯುದ್ಧ ವಿಮಾನಗಳನ್ನು ಸರ್ವ ಸನ್ನದ್ಧಗೊಳಿಸಿ ನೀಡುತ್ತಿದ್ದೆವು. ಅವು ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಹಿಂತಿರುಗುತ್ತಿದ್ದವು. ನಮ್ಮ ವಾಯುನೆಲೆಯನ್ನು ಕೇಂದ್ರೀಕರಿಸಿ ಪಾಕಿಸ್ತಾನದ ಏರ್‌ಕ್ರಾಫ್ಟ್‌ಗಳು ಬರುವಾಗ ಸೈರನ್‌ ಮೊಳಗುತ್ತಿತ್ತು. ತಕ್ಷಣ ಬಂಕರ್‌ನಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದೆವು. ಒಂದು ಸಲ ನಾವಿದ್ದ ವಾಯುನೆಲೆ ಮೇಲೆ ಪಾಕಿಸ್ತಾನದಿಂದ ವೈಮಾನಿಕ ದಾಳಿಯಾಗಿತ್ತು. ಆದರೆ ಅದೃಷ್ಟವಶಾತ್‌ ಯಾವುದೇ ಸಾವು- ನೋವು ಸಂಭವಿಸಲಿಲ್ಲ. ನಮ್ಮ ಬಳಿ 303 ರೈಫಲ್‌ ಇತ್ತು ಎಂದು ಸ್ಮರಿಸಿದರು.

ಪ್ರಸ್ತುತ ಹಸನ್‌ ಸಾಹೇಬ್‌ ಅವರಿಗೆ 80ರ ಇಳಿವಯಸ್ಸು. ಒಟ್ಟು 17 ವರ್ಷ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಅವರು ಮಸ್ಕತ್‌ ಸೇರಿ ವಿವಿಧೆಡೆ ಕೆಲಸ ನಿರ್ವಹಿಸಿ ಉಚ್ಚಿಲದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ. 1971ರ ಅವಧಿಯಲ್ಲಿ ಸೀಮಿತ ವ್ಯವಸ್ಥೆಗಳ ನಡುವೆಯೂ ಪಾಕಿಸ್ತಾನದ ವಿರುದ್ಧ ಭಾರತ ವಿಜಯ ಸಾಧಿಸಿತ್ತು. ಈಗ ಭಾರತದ ಸೇನೆ ಯಾವ ದೇಶಕ್ಕೂ ಕಡಿಮೆ ಇಲ್ಲದಂತೆ ಅತ್ಯಂತ ಬಲಿಷ್ಠವಾಗಿದೆ. ಶತ್ರು ರಾಷ್ಟ್ರವನ್ನು ಎಂಥ ಸಂದರ್ಭದಲ್ಲೂ ಹಿಮ್ಮೆಟ್ಟಿಸುವ ಶಕ್ತಿ ಭಾರತೀಯ ಸೇನೆಗೆ ಇದೆ ಎಂಬ ಆತ್ಮವಿಶ್ವಾಸವನ್ನು ಹಸನ್‌ ಸಾಹೇಬ್‌ ವ್ಯಕ್ತಪಡಿಸಿದ್ದಾರೆ.

ಕೋಡ್‌ ಮೂಲಕ ಸಂವಹನ:

ಯುದ್ಧದ ವೇಳೆ ವಾಯುನೆಲೆಯಲ್ಲಿದ್ದ ಪ್ರತಿಯೊಬ್ಬರಿಗೂ ಕೋಡ್‌ ನೀಡಲಾಗಿತ್ತು. ನಾವು ಪರಸ್ಪರ ಕೋಡ್ ಬಳಸಿಯೇ ಮಾತನಾಡಬೇಕಿತ್ತು. ಅಪರಿಚಿತ ವ್ಯಕ್ತಿಗಳೇನಾದರೂ ನುಸುಳಿದರೆ ಪತ್ತೆ ಹಚ್ಚಲು ಈ ಕ್ರಮ ಅನುಸರಿಸಲಾಗಿತ್ತು. ಕೋಡ್ ಗೊತ್ತಿಲ್ಲದ ವ್ಯಕ್ತಿ ಒಳಗೆ ನುಸುಳಿದರೆ, ಸೂಕ್ತ ಸ್ಪಂದನೆ ನೀಡದಿದ್ದರೆ ಆತ ಶತ್ರುವೆಂದು ಪರಿಗಣಿಸಿ ಶೂಟ್‌ ಮಾಡಲು ಅವಕಾಶ ನೀಡಲಾಗಿತ್ತು. 1971ರ ಯುದ್ಧದ ಅಷ್ಟೂ ಸಮಯ ಹಗಲು- ರಾತ್ರಿಯೆನ್ನದೆ ಕರ್ತವ್ಯ ನಿರ್ವಹಿಸಿದ್ದೇವೆ. ಯುದ್ಧದಲ್ಲಿ ಭಾರತ ವಿಜಯ ಸಾಧಿಸಿತ್ತು ಎಂದು ಹಸನ್‌ ಸಾಹೇಬ್‌ ಸ್ಮರಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌