ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ, ಶಿವಮೊಗ್ಗ ಜಿಲ್ಲೆ ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ಭಾಗದ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಮಾರಕವಾಗುವಂತೆ ಭದ್ರಾ ಡ್ಯಾಂ ಬಲದಂಡೆ ನಾಲೆ ಕಾಲುವೆಯನ್ನೇ ಒಡೆದು, ಕಾಮಗಾರಿ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸಿ, ಮಳೆಗಾಲದ ಬೆಳೆಗೆ ಅಚ್ಚುಕಟ್ಟಿಗೆ ನೀರು ಪೂರೈಸುವಂತೆ ಆಗ್ರಹಿಸಿ ಸಿಎಂ, ಡಿಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದರು.
ಬಲದಂಡೆ ನಾಲೆ ಸೀಳಿ ಕೈಗೊಂಡ ಕಾಮಗಾರಿ ಕೈಬಿಡುವಂತೆ, ಭದ್ರಾ ಡ್ಯಾಂ ಹಿನ್ನೀರು ಅಥವಾ ನದಿಯಿಂದ ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ತಾಲೂಕುಗಳಿಗೆ ನೀರು ಒಯ್ಯುವಂತೆ ಒತ್ತಾಯಿಸಿ ವಿವಿಧ ಹಂತದಲ್ಲಿ ನಿರಂತರ ಹೋರಾಟವನ್ನು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿಯ ಭದ್ರಾ ಡ್ಯಾಂ ಬಳಿ ಮಾಡಿದ್ದೇವೆ. ಇದೀಗ ಹೋರಾಟವನ್ನು ರಾಜ್ಯ ರಾಜಧಾನಿಗೆ ವಿಸ್ತರಿಸಿದ್ದೇವೆ ಎಂದರು.ನಮ್ಮ ಮುಂದಿನ ಹಂತದ ಹೋರಾಟವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈಗಾಗಲೇ ಸಿಎಂ, ಡಿಸಿಎಂಗೆ ಭೇಟಿ ಮಾಡಿ, ಮನವಿ ಮಾಡಿದ್ದೇವೆ. ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ ಖುದ್ದಾಗಿ ಭದ್ರಾ ಡ್ಯಾಂನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುವ ಭರವಸೆ ನೀಡಿದ್ದರು. ಆದರೆ, ಅದನ್ನು ಮಾಡಲಿಲ್ಲ. ಸದ್ಯ ಸಿಎಂ ಕುರ್ಚಿ ಕದನದಲ್ಲಿ ಕಾಂಗ್ರೆಸ್ಸಿನ ನಾಯಕರು ನಿರತರಾಗಿ, ರೈತರ ಹಿತವನ್ನೇ ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಚ್ಚುಕಟ್ಟು ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪದಿದ್ದರೂ ಬಲದಂಡೆ ನಾಲೆಯನ್ನೇ ಸೀಳಿ ನೆರೆ ಜಿಲ್ಲೆಗಳಿಗೆ ನೀರು ಕೊಟ್ಟರೆ, ಅಚ್ಚುಕಟ್ಟು ರೈತರ ಬದುಕು, ಜೀವನ ನರಕಸದೃಶವಾಗುತ್ತದೆ. ನೆರೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ನಮ್ಮ ವಿರೋಧವಿಲ್ಲ. ಆದರೆ, ಅವೈಜ್ಞಾನಿಕವಾಗಿ, ಡ್ಯಾಂಗೆ ಅಪಾಯಕಾರಿಯಾಗುವ ರೀತಿ ಯೋಜನೆ ಕಾಮಗಾರಿ ಕೈಗೊಂಡಿದ್ದಕ್ಕೆ ವಿರೋಧವಿದೆ. ನಾಲೆಯನ್ನು ಸೀಳಿ ಪೈಪ್ ಲೈನ್ ಅಳವಡಿಸುತ್ತಿರುವುದಕ್ಕೆ ನಮ್ಮ ಪ್ರಬಲ ವಿರೋಧವಿದೆ ಎಂದು ಹೇಳಿದರು.
ಜಿಲ್ಲಾ ರೈತರ ಒಕ್ಕೂಟದ ಮುಖಂಡ ಬಿ.ಎಂ.ಸತೀಶ ಕೊಳೇನಹಳ್ಳಿ ಮಾತನಾಡಿ, ಭದ್ರಾ ಡ್ಯಾಂನ ಬಲದಂಡೆ ನಾಲೆ ಸೀಳುವ ಕಾಮಗಾರಿ ತಕ್ಷಣವೇ ನಿಲ್ಲಿಸುವಂತೆ ಸ್ವತಃ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೂಚಿಸಿದ್ದರೂ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಬಳಿ ರೈತರ ನಿಯೋಗ ಕೊಂಡೊಯ್ದು ಒತ್ತಾಯಿಸಿದ್ದರೂ ಅಧಿಕಾರಿಗಳು ಮಾತ್ರ ಕದ್ದುಮುಚ್ಚಿ ಬಲದಂಡೆ ನಾಲೆ ಸೀಳಿರುವ ಸ್ಥಳದಲ್ಲಿ ಕಾಮಗಾರಿ ಮುಂದುವರಿಸಿದ್ದಾರೆ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ್, ಚಂದ್ರಶೇಖರ ಪೂಜಾರ, ಧನಂಜಯ ಕಡ್ಲೇಬಾಳ್ ಮತ್ತಿತರರಿದ್ದರು.