2028ರ ಮಾರ್ಚ್‌ಗೆ ಭದ್ರಾ ಮೇಲ್ದoಡೆ ಯೋಜನೆ ಕಾಮಗಾರಿ ಪೂರ್ಣ

KannadaprabhaNewsNetwork |  
Published : Dec 20, 2024, 12:45 AM IST

ಸಾರಾಂಶ

Bhadra Upper Project work to be completed by March 2028

-ಬೆಳಗಾವಿ ಸುವರ್ಣಸೌಧ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ

------

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028 ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಕೇಳಿದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾರ್ಥ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ. ಈ ಯೋಜನೆಗೆ 29.90 ಟಿಎಂಸಿ ನೀರನ್ನು (ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ರು.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕ್ರತ ಯೋಜನೆಗೆ 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರು.5,300 ಕೋಟಿಗಳ ಅನುದಾನ ಘೋಷಣೆ ಮಾಡಲಾಗಿರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಯೋಜನೆಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ರು.5,300 ಕೋಟಿಗಳ ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆಯಡಿ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.

ಆರ್ಥಿಕ ಪ್ರಗತಿ: ಭದ್ರ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ ರು.1430 ಕೋಟಿಗಳ ಅನುದಾನ ಹಂಚಿಕೆಯಾಗಿದ್ದು, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ ರು.10,115.13 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ.

ಕೇಂದ್ರಕ್ಕೆ ಶಿಫಾರಸ್ಸು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕ, ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತಿಳುವಳಿಕೆ ನೀಡಿರುತ್ತದೆ. ಕೇಂದ್ರದ ಇನ್‍ವೆಸ್ಟ್ ಮೆಂಟ್ ಕ್ಲಿಯರೆನ್ಸ್ ಸಮಿತಿಯು ರು. 16,125.48 ಕೋಟಿಗಳ ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022ರ ಫೆ.15ರ ಕೇಂದ್ರದ ಹೈ ಪವರ್ಡ್ ಸ್ಟ್ರೀಂಗ್ ಕಮಿಟಿಯ 14ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಪಬ್ಲಿಕ್ ಇನ್‍ವೆಸ್ಟ್ ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆ ಅಂಗೀಕರಿಸಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಿದೆ.

ರಾಣಿಕೆರೆಗೆ ವೇದಾವತಿ ನದಿ ನೀರು: ಚಳ್ಳಕೆರೆ ತಾ. ರಾಣಿಕೆರೆಗೆ ವೇದಾವತಿ ನದಿಯ ನೀರನ್ನು 39 ಕಿ.ಮೀ ನಾಲೆಯ ಮುಖಾಂತರ ಹರಿಸುವ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ ಜಲನಿಗಮಕ್ಕೆ ಅನುದಾನ ಸಹಿತ ಹಸ್ತಾಂತರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.

ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಿಗೆ ಸೇರಿರುವ 23,888 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಕಲ್ಪಿಸುವ ಚಿತ್ರದುರ್ಗ ಶಾಖಾ ಕಾಲುವೆ (ಬ್ಲಾಕ್-9) ಮತ್ತು (ಬ್ಲಾಕ್-11) ಕಾಮಗಾರಿಗಳ ಅಂದಾಜು ಪಟ್ಟಿಗಳು ವಿಶ್ವೇಶ್ವರಯ್ಯ ಜಲನಿಗಮದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿನ ಸೂಕ್ಷ್ಮ ನೀರಾವರಿ ಕಲ್ಪಿಸುವ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

----

ಫೋಟೊ: ಡಿ.ಕೆ.ಶಿವಕುಮಾರ (ಮಗ್‌ಶಾಟ್‌)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು