- ಕೆಡಿಪಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಮಧು ಬಂಗಾರಪ್ಪ
- - -ಕನ್ನಡಪ್ರಭ ವಾರ್ತೆ, ಭದ್ರಾವತಿ
ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶನಿವಾರ ಸ್ಪಂದಿಸಿ, ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.ಸಮಿತಿ ಅಧ್ಯಕ್ಷ ಬಿ.ಎನ್. ರಾಜು ನೇತೃತ್ವದಲ್ಲಿ ಹಳೇ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನ ಮುಂಭಾಗ ಅಕ್ಟೋಬರ್ 31ರಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಸಮಿತಿ ಆರೋಪಗಳೇನು?:ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಶಿವಮೊಗ್ಗ, ಸಾಗರ, ಸೊರಬ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರವೇ ಪದೇಪದೆ ಭೇಟಿ ನೀಡುತ್ತಿದ್ದಾರೆ. ಆದರೆ ಭದ್ರಾವತಿ ಕ್ಷೇತ್ರಕ್ಕೆ ಇದುವರೆಗೂ ಭೇಟಿ ನೀಡದೇ ಅಭಿವೃದ್ಧಿಗೆ ನಿರ್ಲಕ್ಷ ವಹಿಸಿದ್ದಾರೆ. ಕ್ಷೇತ್ರದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕಳಪೆ ಕಾಮಗಾರಿಗಳು ಹೆಚ್ಚಾಗಿ ಅವ್ಯವಸ್ಥೆ ಉಂಟಾಗಿದೆ. ಇದುವರೆಗೂ ಸಚಿವರು ಕೆಡಿಪಿ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸಿಲ್ಲ. ಪರಿಣಾಮ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
2017ರಲ್ಲಿ ಪ್ರಾರಂಭವಾದ ಡಾ. ಬಿ.ಆರ್. ಅಂಬೇಡ್ಕರ್ ಭವನ ಕಾಮಗಾರಿ ಅರ್ಧಕ್ಕೆ ನಿಂತಿದೆ. ಪದೇಪದೆ ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಹೆಸರಿಗೆ ಅವಮಾನವಾಗುತ್ತಿದೆ. ಆದರೂ, ಇದುವರೆಗೂ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದು ಸಮಿತಿ ಆರೋಪವಾಗಿದೆ.ಸ್ಥಳಕ್ಕೆ ಆಗಮಿಸಿದ ಸಚಿವ ಮಧು:
ಸಚಿವ ಮಧು ಬಂಗಾರಪ್ಪ ಶನಿವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಡಾ. ಅಂಬೇಡ್ಕರ್ ಹಾಗೂ ಎಸ್.ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಮಿತಿ ಸಲ್ಲಿಸಿದ ಮನವಿ ಸ್ವೀಕರಿಸಿ, ನಂತರ ಅಂಬೇಡ್ಕರ್ ಭವನ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲಿಯೇ ಕೆಡಿಪಿ ಸಭೆ ನಡೆಸಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ, ಬಗೆಹರಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭ ಶಾಸಕ ಬಿ.ಕೆ. ಸಂಗಮೇಶ್ವರ್, ಸಮಿತಿ ಕಾರ್ಯಾಧ್ಯಕ್ಷ ಐ.ಎಲ್. ಅರುಣ್ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ರಂಗಪ್ಪ, ಶೌಕತ್, ಎಂ.ವಿ. ಚಂದ್ರಣ್ಣ, ಕಾರ್ಯದರ್ಶಿಗಳಾದ ರಾಕೇಶ್ಕುಮಾರ್, ವೀರೇಶ್, ಪ್ರಧಾನ ಸಂಚಾಲಕರಾದ ಶ್ರೀನಿವಾಸ್, ಬಸವರಾಜ್, ಸಂಚಾಲಕರಾದ ಅಜಿತ್, ಅಜಯ್, ಕೆ. ಶಿವಕುಮಾರ್, ಟಿ.ಎನ್. ನಾಗರಾಜ, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಎಸ್.ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
- - - -ಡಿ5ಬಿಡಿವಿಟಿ:ಭದ್ರಾವತಿ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಶನಿವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು.