ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲೆಯ ಶಾಸಕರಾದ ಬಿ.ಜಿ.ಗೋವಿಂದಪ್ಪ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಹಾಗೂ ಮಾಜ ಸಂಸದ ಬಿ.ಎನ್.ಚಂದ್ರಪ್ಪ ಅವರುಗಳನ್ನೊಳಗೊಂಡ ಟೀಂ ಶನಿವಾರ ತುಂಗಾದಿಂದ ಭದ್ರೆಗೆ ನೀರು ಲಿಫ್ಟ್ ಮಾಡುವ ಎರಡು ಪಂಪ್ ಹೌಸ್ ಹಾಗೂ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪರಿಶೀಲಿಸಿತು. ವಾರದೊಳಗೆ ನೀರು ಹರಿಯುವ ಸಾಧ್ಯತೆ ಬಗ್ಗೆ ಚರ್ಚಿಸಿತು.
ತುಂಗಾ ಜಲಾಶಯದಿಂದ ಭದ್ರಾ ಜಲಾಶಯದವರೆಗೆ ಹಾಗೂ ಅಲ್ಲಿಂದ ಚಿತ್ರದುರ್ಗ ಶಾಖಾ ಕಾಲುವೆ, ವೈ-ಜಂಕ್ಷನ್ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ, ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಅವಧಿಯೊಳಗೆ ಭದ್ರಾ ನೀರು ಚಿತ್ರದುರ್ಗ ಸೇರಿದಂತೆ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲು ಜನ ಪ್ರತಿನಿಧಿಗಳು ನಿರ್ದೇಶನ ನೀಡಿದರು.ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಹೊಳಲ್ಕೆರೆ ತಾಲೂಕಿನ 20 ಕೆರೆಗಳಿಗೆ ವಾರದೊಳಗೆ ನೀರು ಹಾಯಿಸಲೇಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಅಬ್ಬಿನಹೊಳಲು ಬಳಿ ಇದ್ದ ಅಡೆತಡೆ ಹೆಚ್ಚುಕಡಿಮೆ ಪೂರ್ಣಗೊಂಡಿದ್ದು ಪ್ರಯೋಗಾರ್ಥ ನೀರು ಹಾಯಿಸುವಂತೆ ಸೂಚಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಅಧೀಕ್ಷಕ ಎಂಜಿನಿಯರ್ ಹರೀಶ್, ಉಪಮುಖ್ಯ ಅಧಿಕ್ಷಕ ಎಂಜಿನಿಯರ್ ಪುಷ್ಪಲತಾ, ಕಾರ್ಯಪಾಲಕ ಎಂಜಿನಿಯರ್ ಹರ್ಷ, ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಕಿರಣ್ ಭದ್ರಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.