ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಜಂಟಿಯಾಗಿ ಏರ್ಪಡಿಸಿದ್ದ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಹಾಗೂ ಜನಜಾತಿಯ ಗೌರವ ದಿವಸ ಆಚರಣೆ 2025 ಅನ್ನು ಉದ್ಘಾಟಿಸಿ ಮಾತನಾಡಿ, ಅತಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಹಾಗೂ ಬ್ರಿಟಿಷರ ವಿರುದ್ದ ಸಿಡಿದೆದ್ದ ಬಿರ್ಸಾ ಮುಂಡಾ ಸಮುದಾಯದ ಪಾಲಿಗೆ ದೇವರಾಗಿದ್ದರು ಎಂದರು.
ನೀರು, ಭೂಮಿ, ಅರಣ್ಯ ಬುಡಕಟ್ಟು ಜನರ ಹಕ್ಕು ಎನ್ನುವ ರೀತಿಯಲ್ಲಿ ಹೋರಾಡಿದ್ದರು. ಆಧ್ಯಾತ್ಮಿಕತೆಗೆ ಶಕ್ತಿ ತುಂಬಿದ್ದ ಇವರನ್ನು ದೇವರಂತೆ ಕಾಣುತ್ತಿದ್ದರು. ಇಂತಹ ಆದಿವಾಸಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಆದಿವಾಸಿ ಸಮುದಾಯವಿರುವ ಪ್ರದೇಶಗಳಲ್ಲಿ 1000 ಹೋಂ ಸ್ಟೇ ನಿರ್ಮಿಸಲು ನಿರ್ಧರಿಸಿದ್ದು ಪ್ರತಿ ಹೋಂ ಸ್ಟೇ ನಿರ್ಮಾಣಕ್ಕೆ 5 ಲಕ್ಷ ರು. ಅನುದಾನ ನೀಡಲಾಗುವುದು. ಬುಡಕಟ್ಟು ಗುಂಪುಗಳ ಸಮಗ್ರ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಆದಿವಾಸಿ ಕಲ್ಯಾಣ ಬಜೆಟ್ನ್ನು ಜಾರಿಗೆ ತಂದಿದೆ ಎಂದರು.ಆದಿವಾಸಿ ಭವನಗಳನ್ನು ನಿರ್ಮಿಸಲು 50 ರು. ನೀಡಲಾಗುತ್ತಿದೆ. ಅರಣ್ಯ ಹಕ್ಕು ಕಾಯ್ದೆ, ಸಣ್ಣ ಅರಣ್ಯ ಮತ್ತು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ, ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಪೂರಕ ಆಹಾರ ಯೋಜನೆ, ಆದಿವಾಸಿ ಮಕ್ಕಳಿಗೆ ಶಿಕ್ಷಣ, ಮೂಲಭೂತ ಸೌಕರ್ಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಜನಜಾತಿಯ ದಿನಾಚರಣೆ ಅಂಗವಾಗಿ ಆದಿವಾಸಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ದಿಶಾ ಸಮಿತಿಯ ನಿರ್ದೇಶಕ ಗಿರೀಶ್ ಭದ್ರಾಪುರ, ವಾಲ್ಮೀಕಿ ಸಮಾಜದ ಮುಖಂಡರು, ಜಿಪಂ ಸಿಇಒ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.