ಕನ್ನಡಪ್ರಭ ವಾರ್ತೆ ಮುನಿರಾಬಾದ್
ಭರತ ಹುಣ್ಣಿಮೆ ಅಮ್ಮನವರ ಪೂಜಾ ಕೈಂಕರ್ಯಕ್ಕೆ ವಿಶೇಷವಾಗಿದ್ದು ಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳು, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಹಲವೆಡೆಯಿಂದ ಮುಂಜಾನೆಯಿಂದಲೇ ಭಕ್ತರ ದಂಡು ದೇವಾಲಯದತ್ತ ಆಗಮಿಸಿತ್ತು.
ಮಂಗಳವಾರ ಸಂಜೆಯಿಂದಲೇ ದೇವಸ್ಥಾನಕ್ಕೆ ಭಕ್ತರ ಆಗಮನ ಪ್ರಾರಂಭವಾಗಿದ್ದು, ಮಂಗಳವಾರ ರಾತ್ರಿ ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಸ್ಥಾನದ ಮುಂದೆ ಇರುವ ಶೆಲ್ಟರ್ನಲ್ಲಿ ತಂಗಿ ವಿಶ್ರಾಂತಿ ಪಡೆದು ಬೆಳಗಿನ ಜಾವ 4.30ರಿಂದ ಅಮ್ಮನ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತರು. ಬೆಳಗಿನ ಜಾವ 4.30ಕ್ಕೆ ದೇವಸ್ಥಾನದ ಬಾಗಿಲು ತೆರೆಯುತ್ತಿದ್ದಂತೆ ಭಕ್ತಾಧಿಗಳು ಅಮ್ಮನವರ ದರ್ಶನ ಪಡೆಯಲು ಪ್ರಾರಂಭಿಸಿದರು. ಬೆಳಗ್ಗೆ 10 ಗಂಟೆಯ ವೇಳೆಗೆ ಸುಮಾರು 2 ಲಕ್ಷಕ್ಕೂ ಅಧಿಕ ಜನ ದರ್ಶನ ಪಡೆದರು. ಮಧ್ಯಾಹ್ನ 12ಗಂಟೆಗೆ ದರ್ಶನ ಪಡೆದ ಭಕ್ತರ ಸಂಖ್ಯೆ 3 ಲಕ್ಷ ದಾಟಿತು. ಸಂಜೆ 4 ಗಂಟೆಯ ಒಳಗೆ ಭಕ್ತರ ಸಂಖ್ಯೆಯು 5 ಲಕ್ಷಕ್ಕೆ ತಲುಪಿತು.ಭರತ ಹುಣ್ಣಿಮೆ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡ ಹಿನ್ನೆಲೆ ದೇವಸ್ಥಾನದ ಬಾಗಿಲು ರಾತ್ರಿ 10 ಗಂಟೆಯವರೆಗೂ ತೆರೆದಿತ್ತು. ರಾತ್ರಿ 10 ಗಂಟೆಯವರೆಗೆ ಸುಮಾರು 7 ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಅಮ್ಮನವರ ದರ್ಶನ ಪಡೆದಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ರಾವ್ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.
ವಾಹನ ಸಂಚಾರ ನಿರ್ವಹಣೆಗೆ ಕ್ರಮ:
ದೇವಸ್ಥಾನದ ಮುಂಭಾಗದಲ್ಲಿ ಕೇವಲ ಪಾದಚಾರಿಗಳನ್ನು ಮಾತ್ರ ಬಿಡಲಾಯಿತು. 4 ಚಕ್ರ ವಾಹನಗಳನ್ನು ದೇವಸ್ಥಾನದ ಹಿಂಭಾಗದಲ್ಲಿ ನಿಲ್ಲಿಸಲಾಯಿತು. ದ್ವಿಚಕ್ರ ವಾಹನಗಳನ್ನು ನಂದಿ ವೃತ್ತದಲ್ಲಿ ನಿಲ್ಲಿಸಲಾಯಿತು. ಇದರಿಂದ ವಾಹನ ದಟ್ಟನೆ ಬಹಳ ಮಟ್ಟಿಗೆ ಕಡಿಮೆಯಾಯಿತು. ಪೋಲಿಸ್ ಇಲಾಖೆಯ ಈ ಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.