ಕಾವೇರಿ ತೀರ್ಥೋದ್ಭವ ಕಾರ್ಯಕ್ರಮ ಯಶಸ್ವಿಗೆ ಭೋಸರಾಜು ಕರೆ

KannadaprabhaNewsNetwork |  
Published : Sep 16, 2025, 12:04 AM IST

ಸಾರಾಂಶ

ಅ.17ರಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಜರುಗಲಿರುವ ಕಾವೇರಿ ತೀರ್ಥೋದ್ಭವದ ಅಂಗವಾಗಿ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಳೆದ 2 ವರ್ಷದಿಂದ ತೀರ್ಥೋದ್ಭವದಲ್ಲಿ ಭಾಗವಹಿಸುತ್ತಿದ್ದೇನೆ. ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸುವಂತೆ ಉಸ್ತುವಾರಿ ಸಚಿವ ಭೋಸರಾಜು ಸೂಚಿಸಿದರು‌.

ಅ.17ರಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಜರುಗಲಿರುವ ಕಾವೇರಿ ತೀರ್ಥೋದ್ಭವದ ಅಂಗವಾಗಿ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಬಾರಿ ತಲಕಾವೇರಿಯಲ್ಲಿ ಹಗಲು ವೇಳೆಯಲ್ಲಿ ತೀರ್ಥೋದ್ಭವ ಆಗುವ ಹಿನ್ನೆಲೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಜಾತ್ರೆಯ ಸಂದರ್ಭ ಯಾವುದೇ ಲೋಪ ಉಂಟಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ರಾಜ್ಯ ಸೇರಿದಂತೆ ದಕ್ಷಿಣ ಭಾರತಕ್ಕೆ ನೀರುಣಿಸುವ ಕಾವೇರಿ ತೀರ್ಥೋದ್ಭವದ ಪಾವಿತ್ರ್ಯ ಉಳಿಸುವ ನಿಟ್ಟಿನಲ್ಲಿ ಮದ್ಯ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಮಾಂಸ ಮಾರಾಟ ನಿರ್ಬಂಧಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ.‌ ಈ ಬಗ್ಗೆ ಪರ್ಯಾಯ ಮಾರ್ಗದ ಬಗ್ಗೆ ಗಮನಹರಿಸಲಾಗುವುದು. ಅ.17ರಂದು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗುವುದು ಎಂದರು.

ರಸ್ತೆ ಅವ್ಯವಸ್ಥೆ: ಮಡಿಕೇರಿ-ಭಾಗಮಂಡಲ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆಯನ್ನು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದರು.

ಸ್ಥಳೀಯ ಕುದುಕುಳಿ ಭರತ್ ಮಾತನಾಡಿ, ಮಡಿಕೇರಿಯಿಂದ ಭಾಗಮಂಡಲ ರಸ್ತೆ ತೀವ್ರ ಹದಗೆಟ್ಟಿದೆ. ಬೃಹತ್ ಗುಂಡಿಯನ್ನು ಕೇವಲ ಮುಚ್ಚುವುದರಿಂದ ಪ್ರಯೋಜನವಿಲ್ಲ. ಮಳೆಯಿಂದ ಕೊಚ್ಚಿ ಹೋಗುತ್ತದೆ. ವೈಜ್ಞಾನಿಕವಾಗಿ ಕಾಮಗಾರಿ ನಡೆಸಬೇಕು ಎಂದರು.

ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿ, ಮಳೆ ಇರುವುದರಿಂದ ಟೆಂಡರ್ ನಡೆದರೂ ಕೆಲಸ ಪ್ರಾರಂಭಿಸದಂತೆ ನಾನೇ ಸೂಚಿಸಿದ್ದೇನೆ. ಮಳೆ ಪೂರ್ಣ ಕಡಿಮೆಯಾದ ಮೇಲೆ ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಲೋಕೋಪಯೋಗಿ ಅಭಿಯಂತರ ಇಬ್ರಾಯಿಂ ಮಾತನಾಡಿ, ಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿದೆ. ವೈಜ್ಞಾನಿಕವಾಗಿ ಕೆಲಸ ಮಾಡಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಸಂಚಾರ ಹಾಗೂ ಜನದಟ್ಟಣೆ ಆಗದಂತೆ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತದೆ. ತೀರ್ಥ ಕುಂಡಿಕೆ ಹಾಗೂ ದೇವಾಲಯ ಆವರಣದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗುವುದು. ಭದ್ರತಾ ದೃಷ್ಟಿಯಿಂದ ಹೆಚ್ಚಿನ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗುತ್ತದೆ ಎಂದು ತಿಳಿಸಿದರು.

ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಮಾತನಾಡಿ, ತೀರ್ಥೋದ್ಭವಕ್ಕೂ 2 ಗಂಟೆ ಮುನ್ನ ವಾಹನಕ್ಕೆ ತಡೆಯೊಡ್ಡಬೇಕು. ಹಿರಿಯ ನಾಗರಿಕರಿಗೆ ಬಸ್ ಸಂಚಾರ ಸಾಧ್ಯವಾಗುವುದಿಲ್ಲ. ಅವರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕೆಂದರು.

ಕೆಎಸ್ಆರ್ಟಿಸಿ ವ್ಯವಸ್ಥಾಪಕ ಈರಸಪ್ಪ ಮಾತನಾಡಿ, ಕಳೆದ ಬಾರಿ 15 ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿ ಹೆಚ್ಚಿನ ಬೇಡಿಕೆ ಇದ್ದು, ಒದಗಿಸಲಾಗುವುದು ಎಂದರು.

ಪೊನ್ನಣ್ಣ ಮಾತನಾಡಿ, 25 ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ನೀರಾವರಿ ನಿಗಮ ಅಧಿಕಾರಿ ಪುಟ್ಟಸ್ವಾಮಿ ಮಾತನಾಡಿ, 2 ಕೋಟಿ ರು. ಅನುದಾನ ಕಳೆದ ವರ್ಷದ ಆಚರಣೆಗೆ ಬಿಡುಗಡೆಯಾಗಿತ್ತು. ಈ ಬಾರಿಯೂ‌ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕಾಂಕ್ರಿಟ್ ರಸ್ತೆ, ಚರಂಡಿ ದುರಸ್ತಿಗೂ ಕ್ರಮವಹಿಸಲಾಗುತ್ತದೆ. ತ್ರಿವೇಣಿ ಸಂಗಮದಲ್ಲಿ ಹೂಳೆತ್ತುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಗ್ಯಾರಂಟಿ ಯೋಜನೆಗಳ‌ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಭಾಗಮಂಡಲ ಗ್ರಾ‌ಪಂ ಉಪಾಧ್ಯಕ್ಷೆ ಗಂಗಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ‌ ಆರ್. ಐಶ್ವರ್ಯ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ