ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಬಾಲಕೃಷ್ಣ

KannadaprabhaNewsNetwork |  
Published : Dec 21, 2025, 02:00 AM IST
20ಕೆಆರ್ ಎಂಎನ್ 1.ಜೆಪಿಜಿರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಾಲಕೃಷ್ಣರವರು ಗ್ರೇಟರ್ ಪ್ರಾಧಿಕಾರ ರೈತರ ಮಾಹಿತಿಗಾಗಿ ಹೊರತಂದಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಗ್ರೇಟರ್ ಪ್ರಾಧಿಕಾರ ರೈತರ ಮಾಹಿತಿಗಾಗಿ ಹೊರತಂದಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಜಿದ್ದಿನ ಮೂಲಕ ಅನುಷ್ಠಾನ ಮಾಡಲು ಮುಂದಾಗುತ್ತಿಲ್ಲ. ಈ ವಿಷಯವನ್ನು ರೈತರು ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.

ನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಗ್ರೇಟರ್ ಪ್ರಾಧಿಕಾರ ರೈತರ ಮಾಹಿತಿಗಾಗಿ ಹೊರತಂದಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಈ ಯೋಜನೆಗೆ 2006ರಲ್ಲಿಯೇ ಚಾಲನೆ ಸಿಕ್ಕಿತ್ತು. ಅಂದಿನ ಬಿಡದಿ ಟೌನ್‌ಶಿಪ್ ಯೋಜನೆಗೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಎಂದು ಈಗ ಹೊಸ ರೂಪ ನೀಡಲಾಗಿದೆ. ರೈತರು ಯಾವುದೇ ವಿಷಯವನ್ನಾಗಲಿ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ನಾನು ರೈತರ ಬಗ್ಗೆ ತಪ್ಪು ಮಾತನಾಡಿದ್ದರೆ ಕ್ಷಮೆ ಕೇಳುತ್ತೇನೆ. ನಮ್ಮ ಸರ್ಕಾರಕ್ಕೆ ರೈತರಿಗೆ ತೊಂದರೆ ಕೊಡಬೇಕು ಎಂಬ ಯಾವುದೇ ದುರುದ್ದೇಶವಿಲ್ಲ ಎಂದರು.

ಬಿಡದಿ ಉಪನಗರ ಯೋಜನೆ ಭೂಸ್ವಾಧೀನದಿಂದ ಭೂಮಿ ಕಳೆದು ಕೊಂಡ ರೈತರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಕೊಡುವ ಕೆಲಸವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಲಾಗುತ್ತಿದೆ. ರೈತರಿಗೆ ತೊಂದರೆ ಕೊಡುವ ಯಾವುದೇ ಉದ್ದೇಶವಿಲ್ಲ. ಇಲ್ಲಿ ಯಾರು ಮಧ್ಯವರ್ತಿಗಳಿಲ್ಲ, ರೈತರಿಗೆ ಯಾವುದೇ ಸಂದೇಹಗಳಿದ್ದರೆ ಸಹಾಯವಾಣಿ ಸಂಖ್ಯೆ- 7259198192 ಗೆ ಕರೆ ಮಾಡಿ ಬಗೆಹರಿಸಿಕೊಳ್ಳಬಹುದು. ನಿಮ್ಮ ಸಮಸ್ಯೆಗಳಿಗೆ ನೇರವಾಗಿ ಅಧಿಕಾರಿಗಳೇ ಸ್ಪಂದಿಸಲಿದ್ದಾರೆ. ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಅವರ ಮನವೊಲಿಸಲಿದ್ದೇವೆ. ಸದ್ಯದಲ್ಲಿಯೇ ರೈತರೊಂದಿಗೆ ಸಭೆ ಮಾಡಲಿದ್ದೇವೆ ಎಂದು ಅವರು ಹೇಳಿದರು.

ಯುವಕ-ಯುವತಿಯರಿಗೆ ಕೌಶಲ್ಯವೃದ್ದಿ ಕೇಂದ್ರ ತೆರೆದು ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ತರಬೇತಿ ನೀಡಿ ಉದ್ಯೋಗ ಅವಕಾಶ ಕಲ್ಪಿಸಲು ತೀರ್ಮಾನಿಸಿದ್ದು, ಜೋಗರದೊಡ್ಡಿ ಬಳಿ ನಿರ್ಮಿತಿ ಕೇಂದ್ರದಲ್ಲಿ ಕಚೇರಿ ತೆರೆಯಲಾಗುತ್ತಿದೆ.ಹಪ್ಪಳ, ಉಪ್ಪಿನಕಾಯಿ, ಸಾಂಬರ್ ಪೌಡರ್ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳನ್ನು ಕೈಗಾರಿಕೆಗಳಿಗೆ ಪೂರೈಸಲು ಸ್ತ್ರೀ ಶಕ್ತಿ ಗುಂಪುಗಳು ಹಾಗೂ ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಅವಕಾಶ ಸಿಗುವಂತೆ ಮಾಡಲಿದ್ದೇವೆ. ಇದರಿಂದ ಆ ಭಾಗದ ಮಹಿಳೆಯರಿಗೆ ಉದ್ಯೋಗ ದೊರಕುವಂತಾಗುತ್ತದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆ ಮಾಡಲಿದ್ದೇವೆ. ಸಮಸ್ಯೆ ಹಾಗೂ ಸಂದೇಹಗಳಿರುವ ರೈತರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಅರ್ಜಿ ನೀಡಿದರೆ ನಾವು ಸಭೆಯಲ್ಲಿ ಚರ್ಚಿಸಿ ಪರಿಹಾರ ಸೂಚಿಸುತ್ತೇವೆ. ರೈತರು ತಾಲೂಕು ಕಚೇರಿಗಾಗಲಿ, ಉಪವಿಭಾಗಾಧಿಕಾರಿ ಕಚೇರಿಗಾಗಲಿ ಅಲೆಯದೆ ನೇರವಾಗಿ ಬಂದು ಪ್ರಾಧಿಕಾರದ ಕಚೇರಿಗೆ ಅರ್ಜಿ ನೀಡಿದರೆ ನಾವೆ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಬಾಲಕೃಷ್ಣ ಹೇಳಿದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್‌ ನಟರಾಜು ಮಾತನಾಡಿ , ರೈತರು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳಬೇಕು. ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಪುಸ್ತಕದ ರೂಪದಲ್ಲಿ ಮಾಹಿತಿಯಿದೆ. ನಿಮಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ಪ್ರಾಧಿಕಾರದ ಕಚೇರಿಗೆ ಬಂದು ನೇರವಾಗಿ ಬಗೆಹರಿಸಿಕೊಳ್ಳಬಹುದು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಬಿಡಿಎ ನಿರ್ದೇಶಕರಾದ ಪುಟ್ಟಯ್ಯ, ನರಸಿಂಹಯ್ಯ, ಕಲ್ಯಾಣಕುಮಾರಿ, ಆನಂದ ತೀರ್ಥ, ಜಿಬಿಡಿಎ ಹೆಚ್ಚುವರಿ ಆಯುಕ್ತ ಮಾರುತಿ ಪ್ರಸನ್ನಇದ್ದರು.

--------------------------------------------------

83 ಕೆರೆಗಳಿಗೆ ನೀರು ಹರಿಯಲು ಡಿಕೆ ಬ್ರದರ್ಸ್ ಇಚ್ಛಾಶಕ್ತಿ ಕಾರಣ: ಬಾಲಕೃಷ್ಣ

ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಇಚ್ಛಾಶಕ್ತಿ ಮತ್ತು ಪರಿಶ್ರಮದಿಂದ ಹೇಮಾವತಿ ನೀರು ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ಕೆರೆಗಳಿಗೆ ಹರಿದಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಂತಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಣಿಗಲ್‌ನಿಂದ ಮಾಗಡಿ ತಾಲೂಕಿನ 83 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯೇ ಶ್ರೀರಂಗ ಯೋಜನೆಯಾಗಿದೆ. ಇದರ ಜೊತೆಗೆ ಶೀಘ್ರದಲ್ಲೇ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕೂಡಾ ಆರಂಭವಾಗುತ್ತದೆ. ಶ್ರೀರಂಗ ಯೋಜನೆ ಸಾಕಾರಕ್ಕೆ ಡಿಕೆ ಸಹೋದರರ ಇಚ್ಛಾಶಕ್ತಿ ಪ್ರಮುಖ ಕಾರಣ ಎಂದರು.

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮಾಗಡಿಗೆ ಹೇಮಾವತಿ ನೀರು ಬರಲ್ಲ, ಅದೊಂದು ಬೋಗಸ್ ಸ್ಕೀಂ ಅಂತ ಹೇಳಿದ್ದರು. ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಸಹ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದಾಗ ಮಾಗಡಿಗೆ ಹೇಮಾವತಿಯಿಂದ ನೀರು ಬರುವುದಿಲ್ಲ ಎಂದು ಹೇಳಿದ್ದರು. ಕುಮಾರಸ್ವಾಮಿ ಅವರು ಈ ಡವ್ ಮತ್ತು ಸುಳ್ಳು ರಾಜಕಾರಣ ಬಿಡಬೇಕು ಎಂದು ಹೇಳಿದರು.

ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡುತ್ತಿದ್ದರು. ಆದರೂ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರಿಗೆ ಕೆಲಸ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಕೇವಲ ಬುರುಡೆ ಹೊಡೆಯುವವರು, ಕಣ್ಣೀರು ಸುರಿಸುವವರಿಂದ ಅಭಿವೃದ್ಧಿ ಆಗಲ್ಲ. ನಮ್ಮ ಜಿಲ್ಲೆ ಅದೋಗತಿಗೆ ಹೋಗಲು ಕುಮಾರಸ್ವಾಮಿ ಕಾರಣ. ಜನ ಇದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ 100 ಎಕರೆ ಜಾಗ ಕೊಡಿ ಕೈಗಾರಿಕೆ ತರುತ್ತೇವೆ ಎಂದಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನಸ್ಸು ಮಾಡಿದರೆ ಅವರ ಸ್ವಂತ ಹಣದಲ್ಲಿಯೇ 100 ಎಕರೆ ಜಾಗ ಖರೀದಿ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಬಹುದು. ಇದರಿಂದ ಮಂಡ್ಯ ಜನರ ಋಣ ತೀರಿಸಿದಂತಾಗುತ್ತದೆ. ಇದು ಆಗದಿದ್ದರೆ ಹೇಳಲಿ, ನಾವೇ ರೈತರ ಬಳಿ ಭಿಕ್ಷೆ ಬೇಡಿ ಹಣ ಕೊಡುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.

-----------

ಡಿನ್ನರ್ ಪಾರ್ಟಿ ಯಾರು ಮಾಡಿದರೇನು, ನಮಗೆ ಊಟ ಸಿಕ್ಕರೆ ಸಾಕು: ಬಾಲಕೃಷ್ಣ

ರಾಮನಗರ: ಡಿನ್ನರ್ ಪಾರ್ಟಿ ಹೆಸರಿನಲ್ಲಿ ಯಾರೂ ರಾಜಕೀಯ ಮಾಡುತ್ತಿಲ್ಲ. ಇದೆಲ್ಲಾ ಮಾಧ್ಯಮಗಳ ಊಹೆ ಅಷ್ಟೆ, ನಮ್ಮನ್ನೂ ಡಿನ್ನರ್ ಪಾರ್ಟಿಗೆ ಕರೆದಿದ್ದರು, ಕಾರಣಾಂತರಗಳಿಂದ ಹೋಗಲಾಗಲಿಲ್ಲ, ಡಿನ್ನರ್ ಪಾರ್ಟಿ ಯಾರೂ ಮಾಡಿದರೆ ನಮಗೇನು, ನಮಗೆ ಊಟ ಸಿಕ್ಕರೆ ಸಾಕು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹಾಸ್ಯ ಚಟಾಕಿ ಹಾರಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಸಿದಂತೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಸದ್ಯದಲ್ಲಿಯೇ ಪರಿಹಾರ ಸೂಚಿಸಲಿದೆ. ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅನಗತ್ಯವಾಗಿ ಮಾತನಾಡಿ ಗೊಂದಲ ಸೃಷ್ಟಿಸುವವರ ವಿರುದ್ಧ ಹೈಕಮಾಂಡ್ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.

ಬಿಜೆಪಿ ನಾಯಕರು ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಪಕ್ಷದವರು ಆಡಳಿತ ಪಕ್ಷದ ವಿರುದ್ಧವೇ ಮಾತನಾಡಬೇಕು. ಆದ್ದರಿಂದ ನಾವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದರೂ ಅವರು ಹಾಗೆಯೇ ಹೇಳುತ್ತಾರೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''