ಕಾರವಾರ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಆಪಾದಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿಗೂಢವಾಗಿ ಮೃತಪಟ್ಟಿರುವ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎನ್ನುವುದನ್ನು ನನ್ನ ಒತ್ತಾಸೆಯಾಗಿದೆ. ಆದರೆ ಸೌಜನ್ಯ ಪ್ರಕರಣದ ಎಳೆಯನ್ನು ಹಿಡಿದುಕೊಂಡು ಕೋಟ್ಯಂತರ ಜನರ ಶ್ರದ್ಧಾಕೇಂದ್ರವಾಗಿರುವ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅವಹೇಳನ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.
ಸುಜಾತ್ ಭಟ್ ಅವರು ಅನನ್ಯಾ ಭಟ್ ಅವರ ಕಥೆಯನ್ನು ಹೇಗೆ ಹೆಣೆದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇಂತಹ ಸೂಕ್ಷ್ಮ ವಿಷಯಗಳನ್ನು ಸರ್ಕಾರ ಗುಪ್ತಚರ ಇಲಾಖೆಯಿಂದ ತಿಳಿದುಕೊಳ್ಳಬೇಕು ಏಕಾಏಕಿ ಎಸ್ಐಟಿ ರಚನೆಯ ಹಿಂದೆ ದೆಹಲಿಯಿಂದ ಕರೆ ಬಂದಿರಬಹುದು ಎಂದು ಅವರು ಆಪಾದಿಸಿದರು.ಸಮೀರ ಎಂಬಾತ ಧರ್ಮಸ್ಥಳದ ಬಗ್ಗೆ ಎಐ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಬಿಡುವ ಮೂಲಕ ಕೋಟ್ಯಂತರ ಭಕ್ತರ ಭಾವನೆಗೆ ನೋವನ್ನುಂಟು ಮಾಡಿದ್ದಾನೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಧರ್ಮ ರಕ್ಷಣೆಗಾಗಿ ಧರ್ಮಯುದ್ಧ ಘೋಷಣೆಯಡಿ ಸೆ. 1ರಂದು ಧರ್ಮಸ್ಥಳದಲ್ಲಿ ಲಕ್ಷಾಂತರ ಜನರು ಸೇರಲಿದ್ದಾರೆ. ಜಿಲ್ಲೆಯಿಂದ 4-5 ಸಾವಿರ ಕಾರ್ಯಕರ್ತರು ಮತ್ತು ಭಕ್ತರು ತೆರಳಲಿದ್ದಾರೆ ಎಂದು ಹೇಳಿದರು.