ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕಿನ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತದಿಂದ ಜೂ.9 ರಂದು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಉಚಿತ ಆರೋಗ್ಯ ಶಿಬಿರವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೂರ್ಣ ಪ್ರಮಾಣದ ಸಹಕಾರದೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಜನರು ಏನೆಲ್ಲಾ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆಂಬುದು ಆಶಾ ಕಾರ್ಯಕರ್ತರಿಗೆ ಮಾತ್ರ ಗೊತ್ತಿರುತ್ತದೆ. ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಪ್ರತಿಯೊಬ್ಬರನ್ನೂ ಸಹ ಆರೋಗ್ಯವಂತರನ್ನಾಗಿಸಲು ಸಹಾಯ ಮಾಡುವ ಕಾರ್ಯಕ್ರಮ ಇದಾಗಿರುವುದರಿಂದ ಯಾವೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ವಹಿಸದೆ ಇದು ನಾವೇ ಆಯೋಜಿಸಿರುವ ಆರೋಗ್ಯ ಶಿಬಿರ ಎನ್ನುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.ಕೊಪ್ಪ ಹೋಬಳಿ ಸೇರಿದಂತೆ ತಾಲೂಕಿನಲ್ಲಿ 180ಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದು, ಒಬ್ಬ ಆಶಾ ಕಾರ್ಯಕರ್ತೆ ಅನಾರೋಗ್ಯದಿಂದ ಬಳಲುತ್ತಿರುವ ಕನಿಷ್ಠ 125 ಮಂದಿಯನ್ನು ಶಿಬಿರಕ್ಕೆ ಕರೆತರಬೇಕು. ಇದಕ್ಕೆ ಆಯಾ ಗ್ರಾಪಂ ಪಿಡಿಒಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದರು.
ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಪಂ ಪಿಡಿಒಗಳೊಂದಿಗೆ ಸಂಪರ್ಕದಲ್ಲಿದ್ದು ಟೀಂ ವರ್ಕ್ ಮಾಡಿ ಸೋಮವಾರದೊಳಗೆ 20 ಸಾವಿರಕ್ಕೂ ಹೆಚ್ಚು ಶಿಬಿರಾರ್ಥಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದರು.
ಅನಾರೋಗ್ಯದಿಂದ ಬಳಲುತ್ತಿರುವ ಜನರನ್ನು ಶಿಬಿರಕ್ಕೆ ಕರೆತರಲು ಪ್ರತಿ ಗ್ರಾಪಂಗಳಿಗೆ ಅಗತ್ಯ ಸಾರಿಗೆ ಬಸ್ಗಳನ್ನು ಒದಗಿಸಲಾಗುವುದು. ಪ್ರತಿ ಬಸ್ನಲ್ಲಿ ಪ್ರಥಮ ಚಿಕಿತ್ಸೆ ಕಿಟ್, ಕುಡಿಯುವ ನೀರು, ಬಿಸ್ಕೆಟ್, ಚಾಕೋಲೆಟ್ ಹಾಗೂ ಗ್ಲೂಕೋಸ್ ಪೌಡರ್ ವ್ಯವಸ್ಥೆ ಮಾಡಿರಬೇಕು. ಪ್ರತಿ ಬಸ್ಗೆ ಒಬ್ಬ ವಾಟರ್ ಮನ್ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.