26, 27ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

KannadaprabhaNewsNetwork |  
Published : Feb 21, 2024, 02:04 AM IST
ಚಿತ್ರದುರ್ಗ  ಮೂರನೇ ಪುಟದ ಲೀಡ್    | Kannada Prabha

ಸಾರಾಂಶ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಚಿತ್ರದುರ್ಗ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಒಂದು ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೌಶಲ್ಯ ಮಿಷನ್ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ತಪ್ಪದೇ https://skillconnect.kaushalkar.com ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಿ, ವಿಪುಲ ಉದ್ಯೋಗವಕಾಶಗಳನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ನೀಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. 18 ವರ್ಷ ತುಂಬಿದ, ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು. ಇದಕ್ಕಾಗಿಯೇ, 1800-599-9918 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಬೆಂಗಳೂರು ಚಿತ್ರದುರ್ಗ ಜಿಲ್ಲೆಗೆ ಹತ್ತಿರವಿದ್ದು, ಉತ್ತಮ ಸಾರಿಗೆ ಸೌಲಭ್ಯವಿದೆ. ಯುವನಿಧಿಯಡಿ ಜಿಲ್ಲೆಯ ನೊಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸದಾವಕಾಶವಾಗಿದೆ ಎಂದು ಅಪರ ಜಿಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯ ಪದವಿ ಪೂರ್ವ, ಪದವಿ, ಐಟಿಐ, ಜಿಟಿಟಿಸಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಈಗಾಗಲೇ ತೇರ್ಗಡೆ ಹೊಂದಿದ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ವಿವರವನ್ನು ಸ್ಕಿಲ್ ಕನೆಕ್ಟ್ ಪೋರ್ಟೆಲ್‍ನಲ್ಲಿ ನೋಂದಾಯಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಉದ್ಯೋಗ ಮೇಳ ಕುರಿತಾದ ಜಿಂಗಲ್ಸ್ ಹಾಗೂ ಆಡಿಯೋ ರೆಕಾರ್ಡಿಂಗ್‍ಗಳನ್ನು ಹಾಕುವ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಮಾಹಿತಿ ನೀಡುವಂತೆ ಹಾಗೂ ಮೇಳದಲ್ಲಿ ಪಾಲ್ಗೊಳ್ಳಲು ಪ್ರೆರೇಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ಯೋಜನೆಯಡಿ ನೋಂದಣಿಯಾಗಿ ಸಾಲ ಪಡೆದ ಫಲಾನುಭವಿಗಳ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಶೀಘ್ರವೇ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಬೇಕು. ಈ ಕುಟುಂಬಗಳಿಗೆ ಸ್ವನಿಧಿ ಸಮೃದ್ಧ್ ಯೋಜನೆಯಡಿ, ಪ್ರಧಾನ ಮಂತ್ರಿ ಸುರಕ್ಷಾ ಬೀಮಾ, ಜೀವನ್ ಜ್ಯೋತಿ ಬೀಮಾ, ಶ್ರಮಯೋಗಿ ಮನ್ ಧನ್ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾರ್ಡ್, ಜನಧನ್, ಜನನಿ ಸುರಕ್ಷಾ, ಮಾತೃ ವಂದನಾ ಹಾಗೂ ಲೇಬರ್ ಕಾರ್ಡ್ ಹಣಕಾಸು ಸೌಲಭ್ಯಗಳನ್ನು ಸಮೀಕ್ಷೆ ಆಧಾರದಲ್ಲಿ ನೀಡಲಾಗುವುದು ಎಂದು ಅಪರ ಜಿಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಸಭೆಯಲ್ಲಿ ಪಿ.ಎಂ ವಿಶ್ವಕರ್ಮ, ಡೇನಲ್ಮ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಕೌಶಲ್ಯ ಮಿಷನ್ ಅಭಿಯಾನ ವ್ಯವಸ್ಥಾಪಕ ಅತಿಕ್ ರೆಹಮಾನ್, ಲೀಡ್ ಬ್ಯಾಂಕ್ ಮಾನೇಜರ್ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಕೈಗಾರಿಕಾ ತರಬೇತಿ ಸಂಸ್ಥೆಯ ಮುಖ್ಯಸ್ಥರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೂಗಲ್‌ ಟಾಪ್‌-10ರಲ್ಲಿ ಕ್ಯಾಂಪ್ಕೋ ಚಾಕೋಲೆಟ್‌ಗೆ ಸಿಕ್ತು 8ನೇ ಸ್ಥಾನ!
ಮೇ 15ರೊಳಗೆ ಸಂಪುಟ ಪುನಾರಚನೆ ಶುಭ ಸುದ್ದಿ: ಶಾಸಕ ನಾರಾಯಣಸ್ವಾಮಿ