ರಾಣಿಬೆನ್ನೂರು: ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮನಹಟ್ಟಿ ಕೃಷಿ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಗುಡುಗೂರು ಕ್ರಾಸ್ ಬಳಿ ಮಂಗಳವಾರ ನಸುಕಿನಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಹನುಮನಹಟ್ಟಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು. ಮೈಲಾರ ಜಾತ್ರೆಗೆ ಹೊರಟಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಎತ್ತಿನ ಗಾಡಿಗಳು ಅವರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.