ಕನ್ನಡಪ್ರಭ ವಾರ್ತೆ ಹಾವೇರಿ
ಲಲಿತಾ ಸುರೇಶ ಮೊಟೇಬೆನ್ನೂರ ಅಸ್ವಸ್ಥಗೊಂಡ ಬಿಸಿಯೂಟ ಕಾರ್ಯಕರ್ತೆಯಾಗಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಬಿಸಿಲು, ರಾತ್ರಿಯನ್ನು ಲೆಕ್ಕಿಸದೇ ಪ್ರತಿಭಟನಾ ಸ್ಥಳದಲ್ಲಿಯೇ ಅಡುಗೆ ತಯಾರಿಸಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದರೂ ಈ ವರೆಗೂ ಯಾವ ಅಧಿಕಾರಿಯೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅಲ್ಲದೇ ಅಸ್ವಸ್ಥಗೊಂಡ ಮಹಿಳೆಯ ಆರೋಗ್ಯ ವಿಚಾರಿಸದ ಇಲಾಖೆ ಅಧಿಕಾರಿಗಳ ನಡೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ೬ನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ₹೬ ಸಾವಿರ ವೇತನ ನೀಡುವುದು, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಸಮಿತಿ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
೨೦೦೨-೦೩ರಿಂದ ಯೋಜನೆ ಆರಂಭವಾದಾಗಿನಿಂದ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ಯೋಜನೆ ಕಾರ್ಯಕರ್ತರಿಗೆ ಇಲ್ಲಿಯವರೆಗೂ ಸೇವಾ ಭದ್ರತೆ ಕಲ್ಪಿಸಿಲ್ಲ. ಇವರನ್ನು ಅರೆಕಾಲಿಕ ಬಿಸಿಯೂಟ ಕಾಯಂ ನೌಕರರೆಂದು ಘೋಷಣೆ ಮಾಡಬೇಕು. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಡುಗೆಯವರು ಅಡುಗೆ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವಘಡ ಸಂಭವಿಸಿ ಅಪಘಾತಕ್ಕೊಳಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿ ಚಿಕಿತ್ಸೆ ಪಡೆದಿದ್ದು ಅವರ ಚಿಕಿತ್ಸೆ ವೆಚ್ಚವಾಗಿ ಪ್ರತಿಯೊಬ್ಬರಿಗೂ ₹೧.೫೦ ಲಕ್ಷ ನೀಡಬೇಕು. ಅಡುಗೆ ಸಿಬ್ಬಂದಿಗೆ ಸಮವಸ್ತ್ರ, ಎಪ್ರಾನ್ ಮತ್ತು ಕೈ ಗವಸಗಳನ್ನು ವರ್ಷಕ್ಕೆ ೨ ಜೊತೆಯಂತೆ ಇಲಾಖೆಯಿಂದಲೇ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಸಂಘಟನಾ ಕಾರ್ಯದರ್ಶಿ ವಿನಾಯಕ ಕುರುಬರ, ಜಿಲ್ಲಾಧ್ಯಕ್ಷೆ ಬಿ.ಡಿ. ಪೂಜಾರ, ಲಲಿತಾ ಬುಶೆಟ್ಟಿ, ರಾಜೇಶ್ವರಿ ದೊಡ್ಡಮನಿ, ರೇಖಮ್ಮ ದನ್ನೂರ, ಸರೋಜಮ್ಮ ಹಿರೇಮಠ, ಲತಾ ಹಿರೇಮಠ, ಭಾರತಿ ಕಬನೂರ, ನಿರ್ಮಲಾ ಬಂಕಾಪುರಮಠ ಹಾಗೂ ನೂರಾರು ಬಿಸಿಯೂಟ ಯೋಜನೆಯ ಕಾರ್ಯಕರ್ತೆಯರು ಇದ್ದರು.