ಕನ್ನಡಪ್ರಭ ವಾರ್ತೆ, ತುಮಕೂರು
ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ಕಪಕ್ಕದ ಮನೆಗಳು ಕಾಣದಷ್ಟರ ಮಟ್ಟಿಗೆ ಮಂಜು ದಟ್ಟವಾಗಿ ಆವೃತವಾಗಿತ್ತು. ಇನ್ನು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಬೆಳಿಗ್ಗೆ 8.45 ಗಂಟೆಯಾದರೂ ರಸ್ತೆಯಲ್ಲಿ ಎದುರಿಗೆ ಬರುವ ವಾಹನಗಳು ಚಾಲಕರಿಗೆ ಕಾಣದಂತಾಗಿತ್ತು. ಇದರಿಂದಾಗಿ ವಾಹನಗಳ ಸುಗಮವಾಗಿ ಚಲಿಸಲಾಗದೆ ಚಾಲಕರು ಪರದಾಡುವಂತಾಗಿತ್ತು.
ಬಸ್, ಲಾರಿ, ಕಾರುಗಳು ಹೆಡ್ಲೈಟ್ ಹಾಕಿಕೊಂಡು ಚಲಿಸಿದರೂ ಸಹ ರಸ್ತೆಯಲ್ಲಿ ಬೆಳಕು ಕಾಣದಂತಾಗಿತ್ತು.ಬಸ್ ಚಾಲಕರನ್ನು ಹೊರತುಪಡಿಸಿದರೆ ಸರಕು ಸಾಗಣೆ, ಲಾರಿ ಚಾಲಕರು ಮೈನಡುಗಿಸುವ ಚಳಿ, ದಟ್ಟ ಮಂಜಿನಿಂದಾಗಿ ತಮ್ಮ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಟೀ ಅಂಗಡಿಗಳ ಬಳಿ ಬೆಂಕಿ ಹಾಕಿಕೊಂಡು ಚಳಿಯಿಂದ ಪಾರಾಗಲು ಮೈ ಬಿಸಿ ಮಾಡಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂತು.
ಬೆಳಿಗ್ಗೆ 8.45 ಗಂಟೆಯಾದರೂ ದಟ್ಟ ಮಂಜು ಇದ್ದುದರಿಂದ ಎಂದಿನಂತೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಅನಿವಾರ್ಯವಾಗಿ ಮಾಮೂಲಿನಂತೆ ಎದ್ದು ರೆಡಿಯಾಗಿ 7 ಗಂಟೆಯಿಂದಲೇ ದಟ್ಟ ಮಂಜು ಹಾಗೂ ಮೈನಡುಗಿಸುವ ಚಳಿ ನಡುವೆಯೂ ಸ್ವೆಟರ್, ಜರ್ಕಿನ್ ಧರಿಸಿ ಶಾಲಾ-ಕಾಲೇಜುಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಬೆಳಿಗ್ಗೆ 8.50 ರ ನಂತರ ಸೂರ್ಯನ ಕಿರಣಗಳು ಪ್ರಜ್ವಲಿಸಿದಂತೆ ದಟ್ಟವಾಗಿ ಆವರಿಸಿದ್ದ ಮಂಜು ನಿಧಾನವಾಗಿ ಕಡಿಮೆಯಾಯಿತು.