ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಏರಿಸಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಖಂಡಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ಯಳಂದೂರಿನ ಸಂತೆಮರಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಯಳಂದೂರು
ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಏರಿಸಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಖಂಡಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ಸಂತೆಮರಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.ಸಂತೆಮರಹಳ್ಳಿ ಸರ್ಕಲ್ನಲ್ಲಿ ಮಾಜಿ ಶಾಸಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಪ್ರವಾಸಿ ಮಂದಿರದಿಂದ ಸೈಕಲ್ ಸವಾರಿ ಮಾಡುವ ಮೂಲಕ ಸಂತೆಮರಹಳ್ಳಿ ಸರ್ಕಲ್ ಬಳಿ ಒಗ್ಗೂಡಿ ಪ್ರತಿಭಟಿಸಿದರು.ಈ ಸಂದರ್ಭದಲ್ಲಿ ಎನ್. ಮಹೇಶ್ ಮಾತನಾಡಿ, ರಾಜ್ಯದಲ್ಲಿ ಬರ ಬಂದಿದ್ದು ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಏರಿಕೆ ಕಂಡಿದೆ. ಇದರಿಂದ ಸಾಮಾನ್ಯ ಜನರು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣ ಬರಿದಾಗಿದೆ. ರಾಜ್ಯ ದಿವಾಳಿಯಾಗುವತ್ತ ಸಾಗಿದೆ. ಇದನ್ನು ಸರಿದೂಗಿಸಲು ಕಸರತ್ತು ನಡೆಸಲಾಗುತ್ತಿದ್ದು ಏಕಾಏಕಿ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಲ್ಲಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಕಾಣುವುದರಿಂದ ಜನತೆಯ ಜನಜೀವನದ ಮೇಲೆ ಇದು ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದರೆ ಬೆಲೆ ಹೆಚ್ಚಿಸಲಾಗುತ್ತದೆ. ಕೇಂದ್ರ ಸರ್ಕಾರದ ಅಬಕಾರಿ ನೀತಿ ಬದಲಿಸುವುದು ಕಷ್ಟ. ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಭರವಸೆ ನೀಡಿದ್ದರು. ಆದರೆ ಪೆಟ್ರೋಲ್ಗೆ 3 ರು. ಹಾಗೂ ಡೀಸೆಲ್ಗೆ 3.50 ರು. ಹೆಚ್ಚು ಮಾಡಿದ್ದಾರೆ. ಇದರಿಂದ ಎಲ್ಲಾ ಬೆಲೆ ಏರಿಕೆಯಾಗುತ್ತದೆ. ಸಚಿವ ಎಚ್.ಕೆ. ಪಾಟೀಲ್ ಗ್ಯಾರಂಟಿ ಯೋಜನೆ ಜಾರಿಗೆ ಇಂಧನ ಬೆಲೆ ಏರಿಕೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. 20 ಸಾವಿರ ಕೋಟಿ ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ. ಕೂಡಲೇ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟಿಸಿದರು.ಸಂತೆಮರಹಳ್ಳಿ ಸರ್ಕಲ್ನಲ್ಲಿ ಬೈಕ್ನ ಅಣಕು ಶವಯಾತ್ರೆಯನ್ನು ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ, ಕೆಲ ಕಾಲ ರಸ್ತೆ ತಡೆ ನಡೆಸಲಾಯಿತು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪುಟ್ಟಸ್ವಾಮಿ, ಮಂಗಲ ಶಿವಕುಮಾರ್, ಎನ್ರಿಚ್ ಮಹದೇವಸ್ವಾಮಿ, ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.