ಕನ್ನಡಪ್ರಭ ವಾರ್ತೆ ಸಿಂದಗಿ
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ರಸ್ತೆ ತಡೆದು, ಟೈರ್ಗೆ ಬೆಂಕಿ ಹಚ್ಚಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿದರು.ಪ್ರತಿಭಟನೆ ಉದ್ದೇಶಿಸಿ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಪೆಟ್ರೊಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಎಲ್ಲ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಕೂಡಿಸುವುದಕ್ಕಾಗಿ ರಾಜ್ಯ ಸರ್ಕಾರ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಇದನ್ನು ಸರ್ಕಾರ ಕೂಡಲೇ ಹಿಂದೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಅಶೋಕ ಅಲ್ಲಾಪೂರ, ಬಸವರಾಜ ಹೂಗಾರ, ಜೆಡಿಎಸ್ ತಾಲೂಕಾಧ್ಯಕ್ಷ ಎಂ.ಎನ್.ಪಾಟೀಲ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಹಿತ ಕಾಪಾಡದೆ ದಿಢೀರ್ ತೈಲ ಬೆಲೆಯನ್ನು ಹೆಚ್ಚಿಗೆ ಮಾಡಿದೆ. ಇದರಿಂದ ಜನಸಾಮಾನ್ಯರ ಸ್ಥಿತಿ ಹೇಳತೀರದಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಹಾದಿ ತಪ್ಪಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರದ ಈ ಕ್ರಮವು ಜನರ ನಂಬಿಕೆ ಮತ್ತು ಭಾವನೆಗಳ ದ್ರೋಹ ಮಾಡಿದಂತಾಗುತ್ತದೆ. ಇದು ಒಂದು ದೊಡ್ಡ ವಂಚನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಪೀರಪ್ಪ ಕೆರೂರ, ಪ್ರಕಾಶ ನಂದಿಕೋಲ, ಸಿದ್ದಲಿಂಗಯ್ಯ ಹಿರೇಮಠ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಿ.ಎಚ್.ಬಿರಾದಾರ, ಸಿದ್ದಾರಾಮ ಆನಗೊಂಡ, ಎಂ.ಎಸ್.ಮಠ, ಪ್ರಶಾಂತ ಕದ್ದರಕಿ, ಖಾಜು ಬಂಕಲಗಿ, ಶಂಕರ ಬಗಲಿ, ಶಿವಯೋಗಿ ಮೂಡಗಿ, ಅಶೋಕ ವಾರದ ಆಲಮೇಲ, ಮಲ್ಲಿಕಾರ್ಜುನ ಕುಂಬಾರ, ಅನುಸೂಯಾ ಪಾರಗೊಂಡ, ಶ್ರೀಶೈಲ ಚೆಳ್ಳಗಿ ಸೇರಿದಂತೆ ಅನೇಕರು ಇದ್ದರು. ನಂತರ ಉಪ ತಹಶೀಲ್ದಾರ ರೋಡಗಿ ಅವರಿಗೆ ಮನವಿ ಸಲ್ಲಿಸಿದರು.