ಕನ್ನಡಪ್ರಭ ವಾರ್ತೆ ತುಮಕೂರು
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೇರಿದಂತೆ ಬಿಜೆಪಿಯ ಮುಖಂಡರು ಭಾಗವಹಿಸಿದ್ದ ಈ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳೂರಿನ ಪುತ್ತೂರಿನಿಂದ ಆಗಮಿಸುತ್ತಿದ್ದ ಬಜರಂಗದಳ ರಾಜ್ಯ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಅವರನ್ನು ಪೊಲೀಸರು ಕುಣಿಗಲ್ ಬಳಿ ತಡೆದಿದ್ದರು. ಸಕಾರಣವಿಲ್ಲದೆ ಮುರಳಿಕೃಷ್ಣರನ್ನು ತಡೆದ ಕ್ರಮ ಖಂಡಿಸಿ ಪ್ರತಿಭಟನಾಕಾರರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಜರಂಗದಳದ ಮುಖಂಡ ಮುರಳಿಕೃಷ್ಣರನ್ನು ಪೊಲೀಸರು ತಡೆದ ಕ್ರಮ ಖಂಡನೀಯ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ವಿಧಾನಸೌಧದ ಒಳಗೆ ಬಿಡುತ್ತಾರೆ. ಅವರನ್ನು ಬಂಧಿಸಲು ಮೀನಮೇಷ ಎಣಿಸುವ ಪೊಲೀಸರು, ಮುರಳಿಕೃಷ್ಣರನ್ನು ತಡೆದು ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.ದೇಶ ವಿರೋಧಿಗಳಿಗೆ ಸರ್ಕಾರ ಮೃದುಧೋರಣೆ ತಳೆದಿದೆ. ವೋಟಿನ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ನವರು ದೇಶದ್ರೋಹಿ ಗಳಿಗೆ ಕುಮ್ಮಕ್ಕು ನೀಡುತ್ತಾ ರಾಜ್ಯವನ್ನು ಭಯೋತ್ಪಾದಕರ ತಾಣ ಮಾಡಲು ಹೊರಟಿದ್ದಾರೆ. ಇದೇ ಕಾರಣಕ್ಕೆ ಬಾಂಬ್ ಬ್ಲಾಸ್ಟ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಮಾತನಾಡಿ, ಇದು ಭಾರತೀಯ ಜನತಾ ಪಕ್ಷದ ಸಭೆಯಲ್ಲ. ರಾಜ್ಯದಲ್ಲಿ ಹೆಚ್ಚಾಗುತ್ತಿರುವ ದೇಶದ್ರೋಹಿ ಚಟುವಟಿಕೆಗಳನ್ನು ಖಂಡಿಸಿ ಸಮಾನ ಮನಸ್ಕರು ಅಯೋಜಿಸಿರುವ ಸಭೆ. ಹಿಂದೂ ಕಾರ್ಯಕರ್ತ ಮುರಳೀಕೃಷ್ಣ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದರು. ಅವರು ಜಿಲ್ಲೆಗೆ ಪ್ರವೇಶಿಸುತ್ತಿದಂತೆ ವಶಕ್ಕೆ ಪಡೆಯಲಾಗಿದೆ. ಆವರ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ, ಆದರೂ ವಿನಾಕಾರಣ ಬಂಧಿಸಿ ಸಭೆಗೆ ಬಾರದಂತೆ ತಡೆದಿದ್ದಾರೆ ಎಂದು ದೂರಿದರು.
ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ರಾಜ್ಯರೈತ ಮೋರ್ಚಾಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರದ ಜೊತೆಗೆ ದೇಶವಿದ್ರೋಹಿ ಚಟುವಟಿಕೆಗಳು ನಡೆಯುತ್ತಿವೆ. ನಿಯಂತ್ರಿಸಬೇಕಾದ ಸರ್ಕಾರ ಒಂದು ಕೋಮಿನ ಮತ ಓಲೈಕೆಗಾಗಿ ಅಂತಹವರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು.