ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

KannadaprabhaNewsNetwork |  
Published : Aug 04, 2024, 01:23 AM IST
ಸಚಿವ ದಿನೇಶ ಗುಂಡೂರಾವ್‌ ಸುದ್ದಿಗಾರರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ. ಶೋಷಿತ ವರ್ಗದವರ ದೊಡ್ಡ ಧ್ವನಿಯಾದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳನ್ನು ಮುಗಿಸಲು ಹೇಡಿತನದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ನೂರು ಪುಟಗಳ ದಾಖಲೆ ಕೊಟ್ಟಿದ್ದಾರೆ. ರಾಜ್ಯಪಾಲರು ಅದನ್ನು ಪೂರ್ಣ ಅಭ್ಯಾಸ ಮಾಡಲು ಸಮಯ ಬೇಕು. ಆದರೆ, ರಾಜ್ಯಪಾಲರು ಎರಡು ಗಂಟೆಯಲ್ಲಿ ಓದಿ ಸಿದ್ದರಾಮಯ್ಯನವರಿಗೆ ಬಿಜೆಪಿ ನೋಟಿಸ್ ಕೊಡಿಸಿದೆ ಎಂದು ದೂರಿದರು.

ಬಿಜೆಪಿಗೆ ಕಾನೂನು ಎನ್ನುವುದೇ ಇಲ್ಲ. ಶೇ.95ರಷ್ಟು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದು ಬಿಜೆಪಿ. ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿದರು. ಈಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಂಧಿಸಲು ರಾಜಭವನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಮುಡಾ 50-50 ಸ್ಕೀಂ ತೆಗೆದುಕೊಂಡು ಬಂದವರೇ ಬಿಜೆಪಿಯವರು. ಅದನ್ನು ರದ್ದು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ, ಅವರಿಗೆ ಕಪ್ಪುಮಸಿ ಬಳಿಯಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ತಪ್ಪಿಲ್ಲ. ಮುಡಾ ನಿವೇಶನಗಳು ಜೆಡಿಎಸ್ ಶಾಸಕರಿಗೂ ಹಂಚಿಕೆಯಾಗಿದೆ. ಅದಕ್ಕೆ ಹೋರಾಟದಿಂದ ಹಿಂದೇಟು ಹಾಕಿದ್ದ ಜೆಡಿಎಸ್‌ಗೆ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಜೆಡಿಎಸ್ ಪಾಲ್ಗೊಂಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರಿ ದಾಖಲೆಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಮೈಸೂರು ಪಾದಯಾತ್ರೆ ಮಾಡುವ ನೈತಿಕತೆ ವಿಜಯೇಂದ್ರಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯ ಮುಡಾ ಪಾದಯಾತ್ರೆ ರಾಜಕೀಯ ಪ್ರೇರಿತ. ಇದನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ. ರಾಜ್ಯಪಾಲರ ಮೇಲೆ ನಮಗೆ ಗೌರವ ಇದೆ. ಬಿಜೆಪಿಯವರು ಅವರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬಲ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸಿದೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುತ್ತಿದ್ದಾರೆ. ವ್ಯವಸ್ಥಿತವಾಗಿ ಜೆಡಿಎಸ್ ಸರ್ವನಾಶ ಮಾಡುವ ಕುತಂತ್ರ ಮಾಡುತ್ತಿದ್ದಾರೆ. ಮುಡಾ ಪಾದಯಾತ್ರೆಯ ಬಗ್ಗೆ ಜೆಡಿಎಸ್ ಶಾಸಕರೇ ಬೇಡ ಎನ್ನುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪ, ವಿಜಯೇಂದ್ರ ಹಾಗೆ ರಾಜಕೀಯ ಮಾಡಿಲ್ಲ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ. ರಾಜಕೀಯವಾಗಿ ಇದನ್ನು ಸದೃಢವಾಗಿ ಸಿದ್ದರಾಮಯ್ಯ ಎದುರಿಸಿ ಮತ್ತಷ್ಟು ಗಟ್ಟಿಶಾಲಿಯಾಗಿ ಮುಂದುವರೆಯುತ್ತಾರೆ ಎಂದು ಸಮರ್ಥಿಸಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ಟಿಕೆಟ್‌ ಘೋಷಣೆ ಮುನ್ನವೇ ಕೈ ನಾಮಪತ್ರ