ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ

KannadaprabhaNewsNetwork |  
Published : Mar 27, 2025, 01:05 AM ISTUpdated : Mar 27, 2025, 01:22 PM IST
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು. | Kannada Prabha

ಸಾರಾಂಶ

ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.

ಹುಬ್ಬಳ್ಳಿ: ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು. ಜತೆಗೆ ಸಭೆಯಲ್ಲಿ ಹು-ಧಾ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯ ಸರ್ಕಾರ ವಿರುದ್ಧ ಸದನ ವೇಳೆ ವಿಪಕ್ಷ ನಾಯಕ‌ ಆರ್. ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಅದರ ಮುಂದುವರೆದ ಭಾಗವಾಗಿ 3 ದಿನಗಳ ಕಾಲ ಹುಬ್ಬಳ್ಳಿ ಧಾರವಾಡದಲ್ಲಿ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

ಹನಿಟ್ರ್ಯಾಪ್ ಪ್ರಕರಣ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ, ಡಿ.ಕೆ. ಶಿವಕುಮಾರ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿಸಿ ಸದನದಲ್ಲಿ 18 ಶಾಸಕರ ಅಮಾನತು ವಾಪಸ್ ಪಡೆಯುವ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿವೆ. ರಾಜ್ಯದಲ್ಲಿ 4 ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಮೈಸೂರು, ತುಮಕೂರು, ಹುಬ್ಬಳ್ಳಿ- ಧಾರವಾಡ, ಕೊಪ್ಪಳದಲ್ಲಿ ಬೃಹತ್ ಮಟ್ಟದ ಪ್ರತಿಭಟನೆಗಳು ನಡೆಯಲಿದ್ದು ಅಹೋರಾತ್ರಿ ಧರಣಿ ಮಾಡಲಾಗುತ್ತದೆ. ಈ‌ ಪ್ರತಿಭಟನೆಯಲ್ಲಿ ಬೇರೆ ಬೇರೆ ಜಿಲ್ಲೆಗಳಿಂದಲೂ ಸಾಗರೋಪಾದಿಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದರು.

ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ ಮಾಡಿದರೂ ಎಸ್.ಸಿ, ಎಸ್.ಟಿ. ಹಣವನ್ನು ಗ್ಯಾರಂಟಿಗಳಿಗೆ ನೀಡಲಾಗುತ್ತಿದೆ. ಕಾಂಗ್ರೆಸ್ ನವರು ಮುಸ್ಲಿಂ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ.‌ ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯ ವರೆಗೂ ಕಾಂಗ್ರೆಸ್ ಇದನ್ನೇ ಮಾಡಿಕೊಂಡು‌ ಬಂದಿದೆ. ಪ್ರತಿಭಟನೆಯಲ್ಲಿ 8ರಿಂದ 10 ಸಾವಿರ ಜನರು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ಪ್ರತಿಭಟನೆ ಜತೆಗೆ ಅಹೋರಾತ್ರಿ ಧರಣಿ ಮಾಡಲಾಗುವುದು. ಕಾರ್ಯಕರ್ತರು ಸಾಮಾನ್ಯ ಜನರನ್ನು ಪ್ರತಿಭಟನೆಗೆ ಕರೆದುಕೊಂಡು ಬರುವಂತೆ ತಿಳಿಸಿದರು.

ಈ ವೇಳೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಮಾತನಾಡಿ, ಪ್ರತಿಭಟನೆ ಉದ್ದೇಶ ರಾಜ್ಯ ಸರ್ಕಾರದ ವಿರುದ್ಧವಾಗಿದೆ. ಅಲ್ಪಸಂಖ್ಯಾತರಿಗೆ ಶೇ. 4ರಷ್ಟು ಮೀಸಲಾತಿ, ಡಿ.ಕೆ. ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ, ರಾಜ್ಯ ಸರ್ಕಾರದ ಅವ್ಯವಹಾರಗಳ ವಿರುದ್ಧ ರಾಜ್ಯಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕ ಅಶೋಕ ಕಾಟವೆ, ಸೀಮಾ ಮಸೂತಿ, ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ, ಪಕ್ಷದ ಮಹಾನಗರ ಹಾಗೂ ಗ್ರಾಮಾಂತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!