ಶಿರಸಿ: ಅಂಕೋಲಾದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರನ್ನು ಅಪರಾಧಿ ಎಂದು ಪರಿಗಣಿಸಿ ನ್ಯಾಯಾಲಯ ೭ ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ನ್ಯಾಯಾಲಯದ ಈ ತೀರ್ಪನ್ನು ಉತ್ತರಕನ್ನಡ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅತ್ಯಂತ ಜವಾಬ್ದಾರಿಯುತ ಸ್ಥಾನವಾದ ಶಾಸಕರಾಗಿದ್ದುಕೊಂಡು, ಸರ್ಕಾರಕ್ಕೆ ವಂಚಿಸುವಂತವರಿಗೆ ಈ ತೀರ್ಪು ತಕ್ಕ ಪಾಠವಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನ್ಯಾಯಾಲಯದ ಮುಂದೆ ಎಲ್ಲರೂ ಒಂದೇ ಎಂಬ ಸಂದೇಶವನ್ನು ಈ ತೀರ್ಪು ಸಾರಿದೆ. ಇಂತಹ ತೀರ್ಪಿನಿಂದಾಗಿ ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಮತ್ತು ಗೌರವ ಇನ್ನಷ್ಟು ಹೆಚ್ಚಾಗಲಿದೆ. ಅದಿರು ಕಳ್ಳ ಸಾಗಾಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್ ದೋಷಿ ಆಗಿರುವುದು ದೃಢಪಟ್ಟಿದೆ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರು. ನಷ್ಟವಾಗಿದೆ. ಇಂತಹ ಗುರುತರ ಪ್ರಮಾದ ಎಸಗಿರುವ ವ್ಯಕ್ತಿ ಶಾಸಕ ಸ್ಥಾನದಲ್ಲಿ ಮುಂದುವರಿಯಬಾರದು.
ರಾಜ್ಯ ಸರ್ಕಾರ ಮತ್ತು ವಿಧಾನಸಭಾಧ್ಯಕ್ಷರು ಈ ಕೂಡಲೇ ಅಪರಾಧಿ ಶಾಸಕರನ್ನು ಅನರ್ಹಗೊಳಿಸಬೇಕು. ಎರಡು ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಗೆ ಒಳಗಾಗುವ ಶಾಸಕರ ಸ್ಥಾನ ರದ್ದು ಆಗಬೇಕಾಗಿರುವುದರಿಂದ ತಕ್ಷಣ ವಿಧಾನಸಭಾಧ್ಯಕ್ಷರು, ಶಾಸಕ ಸತೀಶ ಸೈಲ್ ಅವರನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಕಾರವಾರ: ಶಾಸಕ ಸತೀಶ ಸೈಲ್ ಜೈಲಿಗೆ ಹೋಗಿರುವುದರಿಂದ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ತಮಗೆ ಒತ್ತಾಯ ಕೇಳಿಬರುತ್ತಿದೆ. ಆದರೆ ಸತೀಶ ಸೈಲ್ ಅವರಿಗೆ ಕಾನೂನಿನ ಹೋರಾಟದಲ್ಲಿ ನ್ಯಾಯ ದೊರಕಲಿ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಹೇಳಿದ್ದಾರೆ.