ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರು. ಭ್ರಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿರುವ ಆರೋಪಿ, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರು. ಭ್ರಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿರುವ ಆರೋಪಿ, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ ಸರ್ಕಾರಿ ಹಣವನ್ನು ವಿವಿಧ ಖಾಸಗಿ ಖಾತೆಗಳಿಗೆ ವರ್ಗಾಯಿಸಿದ್ದು, ನಾಗೇಂದ್ರ ಇನ್ನೂ ನ್ಯಾಯಾಲಯದಿಂದ ಆರೋಪಮುಕ್ತರಾಗಿಲ್ಲ. ಆರೋಪಿಯಾಗಿರುವ ಅವರನ್ನು ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಜನರಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಆದ್ದರಿಂದ ರಾಜ್ಯಪಾಲರು ಅವರ ರಾಜೀನಾಮೆಯನ್ನು ಪಡೆಯಲು ಮುಖ್ಯಮಂತ್ರಿಗಳಿಗೆ ಸೂಚಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಸದಾನಂದ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.