ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಹಿಂಪಡೆಯಲು ಬಿಜೆಪಿ ಆಗ್ರಹ

KannadaprabhaNewsNetwork |  
Published : Jun 21, 2024, 01:08 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ   | Kannada Prabha

ಸಾರಾಂಶ

ಇಂಧನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಕಾರೊಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಕಾರಿಗೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗಇಂಧನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಿ, ಹೆಚ್ಚಳ ಮಾಡಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕಾರೊಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ಸರ್ಕಾರದ ನಡೆಗೆ ವ್ಯಂಗ್ಯವಾಡಿದರು. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಮುರಳಿ ಮಾತನಾಡಿ, ಗ್ಯಾರಂಟಿಗಳನ್ನು ನಿರ್ವಹಣೆ ಮಾಡಲು ಸಾಧ್ಯವಾಗದ ರಾಜ್ಯ ಸರ್ಕಾರ ವಿಪರೀತ ತೆರಿಗೆ ಶುಲ್ಕ ಹೆಚ್ಚಳದ ಅಭಿಯಾನವನ್ನೇ ಆರಂಭಿಸಿದೆ. ಹಲವಾರು ಕ್ಷೇತ್ರಗಳ ತೆರಿಗೆ ಹೆಚ್ಚಿಸಿದೆ. ಕರ್ನಾಟಕದ ಜನರ ಬದುಕನ್ನೇ ದುಸ್ತರವನ್ನಾಗಿ ಮಾಡಿದ ಜನ ವಿರೋಧಿ ಸರಕಾರ ವಾಗಿದೆ ಎಂದು ದೂರಿದರು.

ರೈತರು, ಎಸ್‍ಸಿ, ಎಸ್‍ಟಿ, ಒಬಿಸಿಗಳ ವಿರೋಧಿ ಸರಕಾರವಾಗಿ ಕಂಗೊಳಿಸುತ್ತಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಶ್ರೀಸಾಮಾನ್ಯನ ಬದುಕಿನ ಮೇಲೆ ಬರೆ ಎಳೆದಿದೆ. ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.

ಆಸ್ತಿ ತೆರಿಗೆಯನ್ನು ಶೇ.20ರಿಂದ ಶೇ.120 ವರೆಗೆ ಹೆಚ್ಚಿಸಿದ್ದಾರೆ. ಮೋಟಾರು ವಾಹನ ತೆರಿಗೆಯನ್ನು ಶೇ. 40ರಿಂದ ಶೇ.80ರಷ್ಟು ಹೆಚ್ಚಿಸಿದ್ದಾರೆ. ಅಬಕಾರಿ ತೆರಿಗೆ (ಮದ್ಯ) ಶೇ.20ರಿಂದ ಶೇ.400ವರೆಗೆ ಹೆಚ್ಚಳವಾಗಿದೆ. ಮಹಿಳೆಯರ ಬಸ್ ಪ್ರಯಾಣ ದರ ಉಚಿತ ಎನ್ನುತ್ತಲೇ ಗಂಡಸರ ಬಸ್ ಪ್ರಯಾಣ ದರ ಏರಿಸಿದ್ದಾರೆ ಎಂದು ಮುರಳಿ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ದರ ಹೆಚ್ಚಿಸಿದ ಪರಿಣಾಮ ಕೈಗಾರಿಕಾ ಉತ್ಪನ್ನಗಳ ಬೆಲೆ ಸಹಜವಾಗಿ ಏರಿದೆ. ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನವನ್ನು ಕಡಿಮೆ ಮಾಡಿ ಪ್ರತಿ ಲೀಟರ್ ಹಾಲಿನ ದರ ಏರಿಸಿದ್ದಾರೆ. ಇದರಿಂದ ಹಾಲು, ಮೊಸರು, ತುಪ್ಪ ಮತ್ತಿತರ ಉತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನವ ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಕಾರ್ಮಿಕರ 4 ಲಕ್ಷ ಮಕ್ಕಳಿಗೆ ಸ್ಕಾಲರ್ ಶಿಫ್‌ನಿಂದ ವಂಚಿತರಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 900 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರಗಳ ಬೆಲೆಯೂ ಹೆಚ್ಚಿಸಿದ್ದಾರೆ. ದಿನನಿತ್ಯ ಕರ್ನಾಟಕದಲ್ಲಿ ಕೊಲೆಗಳ ಸರಣಿ ನಡೆದಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದರು.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಾಜಿ ಕಾರ್ಯದರ್ಶಿ ಮಲ್ಲಿಕಾರ್ಜನ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಬಿಜೆಪಿ ಮಾಧ್ಯಮ ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್ ಸಿದ್ದಾಪುರ, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ಬಸಮ್ಮ, ಮಂಜುಳ, ನಗರಸಭಾ ಸದಸ್ಯರಾದ ಶ್ರೀನಿವಾಸ್, ಹರೀಶ್, ಸುರೇಶ್, ಕೃಷ್ಣಮೂರ್ತಿ, ಮಾಜಿ ಸದಸ್ಯ ರವಿಶಂಕರ್, ಸೀತಾರಾಂ ರೆಡ್ಡಿ, ಗಾ.ನಾ ಲಿಂಗರಾಜು, ನಂದಿ ನಾಗರಾಜ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್