ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?

KannadaprabhaNewsNetwork |  
Published : Mar 22, 2024, 01:05 AM IST
11 | Kannada Prabha

ಸಾರಾಂಶ

ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಪ್ರತಿ ಬಾರಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ವೇಳೆ ಕರಾವಳಿಗೆ ಆಗಮಿಸಿ ಭರ್ಜರಿ ಪ್ರಚಾರ ಭಾಷಣ ಹಾಗೂ ರೋಡ್‌ಶೋ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಭೇಟಿ ನೀಡುವುದು ಅನುಮಾನ ಎಂಬ ಬಲವಾದ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಈ ಬಾರಿ ಕ್ಲಸ್ಟರ್‌ ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯ ಕಾರ್ಯಕ್ರಮ ಆಯೋಜಿಸಲು ಬಿಜೆಪಿ ವರಿಷ್ಠರು ಆಲೋಚಿಸುತ್ತಿದ್ದಾರೆ. ಹೀಗಾಗಿ ಮೊದಲ ಪ್ರಚಾರ ಸಭೆಯನ್ನು ಸೋಮವಾರ ಶಿವಮೊಗ್ಗದಲ್ಲಿ ಆಯೋಜಿಸಲಾಗಿತ್ತು. ಆ ಸಭೆಯನ್ನು ದ.ಕ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ನಡೆಸಲಾಗಿದೆ. ಅದರಲ್ಲಿ ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ. ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭಾಗವಹಿಸಿದ್ದರು. ಕರಾವಳಿ ಜಿಲ್ಲೆ ಹೇಗೂ ಬಿಜೆಪಿಯ ಭದ್ರಕೋಟೆ, ಆದ ಕಾರಣ ನರೇಂದ್ರ ಮೋದಿ ಅವರನ್ನು ಇಲ್ಲಿಗೆ ಕರೆಸುವ ಬದಲು ಬಿಜೆಪಿಗೆ ಗೆಲವು ಕಠಿಣ ಇರುವ ಕಡೆಗಳಲ್ಲಿ ಸಮಾವೇಶಗಳಲ್ಲಿ ಬಳ‍ಸಿಕೊಳ್ಳುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆಯುತ್ತಿದೆ.ಮೋದಿ ಕರೆಸದೆ ಮೊದಲ ಪ್ರಯೋಗ?:

ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ. ಈ ಹೊಸ ಪ್ರಯೋಗ ಯಶಸ್ವಿಯಾದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಭದ್ರಕೋಟೆ ಇರುವ ಕಡೆಗಳಲ್ಲಿ ಮೋದಿ ಅವರನ್ನು ಕರೆಸದೆ ಚುನಾವಣೆ ಗೆಲ್ಲುವ ಆಲೋಚನೆ ನಾಯಕರಲ್ಲಿ ಮೂಡಿದೆ.

ಇನ್ನೊಂದು ಮಾಹಿತಿ ಪ್ರಕಾರ, ದ.ಕ.ದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಿಗೆ ಟಿಕೆಟ್‌ ನೀಡಲು ಸಾಧ್ಯವಾಗಿಲ್ಲ. ಜನರ ವಿರೋಧ ಕಾರಣಕ್ಕೆ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಇದೇ ರೀತಿ ಉಡುಪಿಯಲ್ಲೂ ಹಾಲಿ ಸಂಸದರ ಬದಲು ಹೊಸಬರಿಗೆ ಟಿಕೆಟ್‌ ನೀಡಲಾಗಿದೆ. ಉತ್ತರ ಕನ್ನಡದಲ್ಲಿ ಹಾಲಿ ಸಂದರನ್ನು ಬದಲಿಸಲು ನಾಯಕರು ತೀರ್ಮಾನಿಸಿದ್ದಾರೆ. ಅಲ್ಲಿ ಟಿಕೆಟ್‌ ಯಾರಿಗೆ ಎನ್ನುವುದೇ ಅಂತಿಮವಾಗಿಲ್ಲ. ಇವೆಲ್ಲವೂ ಕರಾವಳಿ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆಯಾಗಿದ್ದು, ಇದು ಕೂಡ ಮೋದಿ ಕಾರ್ಯಕ್ರಮ ಕರಾವಳಿಯಿಂದ ದೂರವಾಗಲು ಕಾರಣವಾಗಿದೆ ಎಂದು ಹೇಳಲಾಗಿದೆ.

ಆದರೆ ಕೊನೆಕ್ಷಣದಲ್ಲಿ ಪರಿಸ್ಥಿತಿಯನ್ನು ಅವಲಂಬಿಸಿ ಮೋದಿ ಸಮಾವೇಶ ಆಯೋಜನೆಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ. ಮೋದಿ ಬದಲು ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮುಂತಾದ ಘಟನಾನುಘಟಿಗಳನ್ನು ಕರೆಸುವ ಸಾಧ್ಯತೆಯನ್ನು ಜಿಲ್ಲೆಯ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ಲೋಕಸಭೆ ಹಾಗೂ ಅಸೆಂಬ್ಲಿ ಚುನಾವಣೆಗೆ ಕರಾವಳಿಯಲ್ಲಿ ಇದುವರೆಗೆ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡುವುದನ್ನು ತಪ್ಪಿಸಿಲ್ಲ. 2013ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ನೆಹರೂ ಮೈದಾನದಲ್ಲಿ ಅಸೆಂಬ್ಲಿ ಚುನಾವಣೆಗೆ ಭಾಷಣ ಮಾಡಿದ್ದರು. 2014ರ ಫೆಬ್ರವರಿಯಲ್ಲಿ ಮಂಗಳೂರು ನೆಹರೂ ಮೈದಾನದಲ್ಲಿ ಭಾರತ ಗೆಲ್ಲಿಸಿ ಸಮಾವೇಶ, 2018ರಲ್ಲೂ ಅಸೆಂಬ್ಲಿ ಚುನಾವಣಾ ಭಾಷಣ ಮಾಡಿದ್ದರು. 2019ರ ಏಪ್ರಿಲ್‌ನಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. 2023ರಲ್ಲೂ ಮೂಲ್ಕಿಯ ಮೈದಾನ ಹಾಗೂ ಉಡುಪಿಯಲ್ಲಿ ಚುನಾವಣಾ ರ್‍ಯಾಲಿ ನಡೆಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ