ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪುಡಾ ಅಧ್ಯಕ್ಷರ ವಿರುದ್ದ ಬಿಜೆಪಿ ದೂರು

KannadaprabhaNewsNetwork | Published : May 15, 2025 1:37 AM
Follow Us

ಸಾರಾಂಶ

ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷ ಅಮಳ ರಾಮಚಂದ್ರ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷ ಅಮಳ ರಾಮಚಂದ್ರ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಠಾಣೆಯ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ದೂರು ನೀಡಿದ್ದಾರೆ.ಅಮಳ ರಾಮಚಂದ್ರ, ಮೇ ೧೨ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಬರಹವನ್ನು ಬರೆದಿರುತ್ತಾರೆ. ಜೊತೆಗೆ ಪ್ರಧಾನಿಯವರನ್ನು ಅಣಕಿಸುವ ಅನೇಕ ಪೋಸ್ಟರ್‌ಗಳನ್ನು ಅವರು ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವುದು ದೇಶದ ಉನ್ನತ ಹುದ್ದೆಯಲ್ಲಿರುವ ಪ್ರಧಾನಿಯವರಿಗೆ ಮಾಡಿದ ಅವಮಾನವಾಗಿದೆ. ದೇಶದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಕೀಳು ಭಾವನೆಯನ್ನು ಹಬ್ಬಿಸುವುದು, ಪ್ರಚಾರ ಮಾಡುವುದು ದೇಶದ ಭದ್ರತೆಯ ಬಗ್ಗೆ ಕೀಳು ಭಾವನೆಯನ್ನು ಬಿಂಬಿಸುವುದು ದೇಶ ದ್ರೋಹದ ಕೆಲಸವಾಗಿದೆ. ಇದು ಬಿಜೆಪಿ ಕಾರ್ಯಕರ್ತರಾದ ನಮಗೆ ಬೇಸರ ಆಗಿದೆ. ಅಲ್ಲದೆ ದೇಶದ ಪ್ರಧಾನಿಯವರಿಗೆ ಅವಮಾನ ಮಾಡಿದ್ದಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿಯವರನ್ನು ಅವಮಾನ ಮಾಡಿದ ಅಮಳ ರಾಮಚಂದ್ರ ಅವರ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ದೂರಿನಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ಬಿಜೆಪಿ ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.