ಬಿಜೆಪಿ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ: ಸಿಎಂ

KannadaprabhaNewsNetwork |  
Published : Apr 04, 2026, 03:00 AM IST
(ಫೋಟೊಬಿಕೆಟಿ8,  (1) ಬೇವಿನಮಟ್ಟಿ ಗ್ರಾಮದಲ್ಲಿ ಅಭೂತಪೂರ್ವ  ಪ್ರಚಾರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ) | Kannada Prabha

ಸಾರಾಂಶ

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಶುಕ್ರವಾರ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ. ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಸಿಎಂ, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾಗಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವುದಕ್ಕೆ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ಎರಡೂ ಕಡೆ ಗೆಲುವು ನಮ್ಮದೆ:

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದು ಪ್ರಶ್ನಿಸಿದರು.

ರಾಜ್ಯದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಟೆಯಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ತಲಾದಾಯದಲ್ಲಿ ದೇಶದಲ್ಲೇ ನಾವೇ ನಂಬರ್ ಒನ್: ಸಿದ್ದರಾಮಯ್ಯ