ಶಿವಕುಮಾರ ಕುಷ್ಟಗಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಟ ನಡೆಸಬೇಕಾದ ಸಂದರ್ಭದಲ್ಲಿ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಬರಗಾಲ, ರೈತರ ಸಂಕಷ್ಟ, ಕುಡಿಯುವ ನೀರಿನ ಸಮಸ್ಯೆ ಹಾಗೂ ಯುವಕರ ನಿರುದ್ಯೋಗದ ವಿರುದ್ಧ ನಡೆದ ಜನಪರ ಹೋರಾಟದಲ್ಲಿ ಭಾಗವಹಿಸಿದ ತನ್ನದೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬಿಜೆಪಿ ನೋಟಿಸ್ ನೀಡಿರುವುದು ಗದಗ ಜಿಲ್ಲಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರೈತರು, ಯುವಕರು, ಮಹಿಳೆಯರು ಹಾಗೂ ನಾಗರಿಕರು ಪಾಲ್ಗೊಂಡು, ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ಗದಗ, ಬೆಟಗೇರಿ ಅವಳಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದರು. ಇದರಲ್ಲಿ ಹಲವಾರು ಬಿಜೆಪಿ ಮುಖಂಡರು, ಕಾರ್ಯಕರ್ತರು ಯುವಕರು ಪಾಲ್ಗೊಂಡಿದ್ದರು.ಸಮಸ್ಯೆ ಏನು?: ಗದಗ, ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ವರ್ಷಗಳಿಂದ ಜನರನ್ನು ಕಾಡುತ್ತಿದೆ. ಹಲವು ಪ್ರದೇಶಗಳಲ್ಲಿ ಸುಮಾರು 20 ದಿನಗಳಿಗೊಮ್ಮೆ ನೀರು ಪೂರೈಕೆಯಾಗುವ ಪರಿಸ್ಥಿತಿ ಇದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇಂತಹ ಗಂಭೀರ ಜನಸಮಸ್ಯೆ ಕುರಿತು ಬಿಜೆಪಿ ನಾಯಕರು ದೊಡ್ಡ ಪ್ರಮಾಣದಲ್ಲಿ ಬೀದಿಗಳಿದು ಹೋರಾಟ ಮಾಡುವುದಾಗಲಿ, ಗಟ್ಟಿಯಾಗಿ ಧ್ವನಿ ಎತ್ತದೆ ಇರುವ ಹಿನ್ನೆಲೆಯಲ್ಲಿ ಅದೇ ಸಮಸ್ಯೆಗಾಗಿ ಯುವಕರು ಮತ್ತು ನಾಗರಿಕರು ಬೀದಿಗಿಳಿದು ಹೋರಾಟ ನಡೆಸಿದಾಗ, ಅದರಲ್ಲಿ ಭಾಗವಹಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ನೋಟಿಸ್ ನೀಡಿರುವುದು ಎಷ್ಟು ಸಮರ್ಥನೀಯ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಪಕ್ಷಕ್ಕೆ ಪೂರಕವಲ್ಲದ ಸಂಘಟನೆಗಳ ಕಾರ್ಯಕ್ರಮದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪಕ್ಷದ ನಿರ್ಧಾರದಂತೆ ನೊಟೀಸ್ ನೀಡಲಾಗಿದೆ ಎಂದು ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ ಹೇಳಿದರು.