ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಅಕ್ರಮ - ಸರ್ಕಾರದ ವಿರುದ್ಧ ಆ.3ರಿಂದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

KannadaprabhaNewsNetwork |  
Published : Jul 29, 2024, 12:50 AM ISTUpdated : Jul 29, 2024, 05:14 AM IST
BJP and JDS Metting 4 | Kannada Prabha

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಬರುವ ಆಗಸ್ಟ್ 3ರಿಂದ (ಶನಿವಾರ) ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಿವೆ.

 ಬೆಂಗಳೂರು ; ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಬರುವ ಆಗಸ್ಟ್ 3ರಿಂದ (ಶನಿವಾರ) ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಿವೆ.ಒಟ್ಟು ಏಳು ದಿನಗಳ ಪಾದಯಾತ್ರೆ ಇದು. ಎಂಟನೇ ದಿನ ಅಂದರೆ, ಆ.10ರಂದು (ಶನಿವಾರ) ಮೈಸೂರಿನಲ್ಲಿ ಬೃಹತ್‌ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಭಾನುವಾರ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯ ನಾಯಕರ ಸಮನ್ವಯ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ದಿನಾಂಕ ಅಂತಿಮಗೊಳಿಸಲಾಯಿತು.ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು ಏಳು ದಿನ ಬೇಕಾಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರದ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ದಿನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ನಂತರ ಆ.10ರಂದು ಸಮಾರೋಪ ನಡೆಯಲಿದೆ. ಆ ಸಮಾರಂಭಕ್ಕೆ ಪಕ್ಷದ ಕೇಂದ್ರದ ನಾಯಕರೂ ಬರಲಿದ್ದಾರೆ. ಯಾತ್ರೆಯ ವಿವರಗಳನ್ನು ಮತ್ತೊಂದು ಬಾರಿ ಚರ್ಚಿಸಿ ನೀಡಲಾಗುವುದು ಎಂದರು.

ಭ್ರಷ್ಟ ಸರ್ಕಾರ ಕಿತ್ತೊಗೆಯೋಣ- ಬಿಎಸ್‌ವೈ:ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿ, ಭ್ರಷ್ಟ ಸರ್ಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನರು ಸೇರಿ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಈ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಗೌರವ ಇದ್ದರೆ ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಮೊದಲ ದಿನದಿಂದಲೇ ಅಕ್ರಮ- ಎಚ್‌ಡಿಕೆ:ಕೇಂದ್ರ ಭಾರಿ ಕೈಗಾರಿಕಾ ಸಚಿವ ಕುಮಾರಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಸುಳ್ಳು ಹೇಳಿ ಜನರ ದಾರಿಪ್ಪಿಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೇ ಅಕ್ರಮ ಶುರುವಾಗಿದೆ. ವರ್ಗಾವಣೆ ದಂಧೆ ನಡೆದಿದೆ ಎಂದು ಆಪಾದಿಸಿದರು.

ಸದನದ ಕಲಾಪ ಎದುರಿಸಲಾಗದೆ ಮಾಧ್ಯಮದ ಮೂಲಕ ಪ್ರಾಯೋಜಿತ ಹೇಳಿಕೆ ನೀಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ. ಸುದೀರ್ಘವಾಗಿ ಆಡಳಿತ ನಡೆಸಿದ ಅನುಭವ ಇದ್ದರೂ ಸದನದಲ್ಲಿ ಉತ್ತರಿಸಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕರು ದಾಖಲೆ ಸಹಿತ ಮಾತನಾಡಿದ್ದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಯಾರೂ ಕೊಡದಷ್ಟು ಪ್ರಾಮುಖ್ಯತೆ ಕೊಡ್ತೇವೆ ಎಂದವರು ಲೂಟಿ ಮಾಡಿದರು. ಅದರ ನಾಯಕತ್ವವನ್ನು ಖುದ್ದು ಮುಖ್ಯಮಂತ್ರಿಗಳೇ ವಹಿಸಿದ್ದಾರೆ ಎಂದು ಕಿಡಿಕಾರಿದರು.ಸಭೆಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌