ಅಂಜಲಿ ಕೊಲೆ ಖಂಡಿಸಿ ಬಿಜೆಪಿ - ಜೆಡಿಎಸ್ ಪ್ರತಿಭಟನೆ

KannadaprabhaNewsNetwork | Published : May 19, 2024 1:45 AM

ಸಾರಾಂಶ

ರಾಮನಗರ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಕೊಲೆ ಹಾಗೂ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ರಾಮನಗರ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಕೊಲೆ ಹಾಗೂ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆ ಮಾಸುವ ಮುನ್ನವೇ ಮತ್ತೊಬ್ಬ ಯುವತಿ ಆಂಜಲಿ ಅಂಬಿಗೇರ ಕೊಲೆಯಾಗಿರುವುದು ದುರಂತದ ಸಂಗತಿಯಾಗಿದೆ. ನೇಹಾ ಹತ್ಯೆಯಾದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದರೆ, ಈ ಘಟನೆ ನಡೆಯುತ್ತಿರಲಿಲ್ಲ ಎಂದರು.

ರಾಜ್ಯದಲ್ಲಿ ಪದೇ ಪದೇ ಹತ್ಯೆಗಳು, ಹಲ್ಲೆ ಪ್ರಕರಣಗಳು ನಡೆಯುತ್ತಿರುವುದನ್ನು ನೋಡಿದರೆ ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಆಡಳಿತ ಮಾಡಲು ಸಂಪೂರ್ಣವಾಗಿ ವಿಫಲವಾರಾಗಿದ್ದು, ಈ ರೀತಿಯ ಘಟನೆಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಟೀಕಿಸಿದರು.

ಕೊಲೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಾಗುತ್ತಿಲ್ಲ. ಹೀಗಾಗಿ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಲೇ ಇದೆ. ಕೂಡಲೇ ಸರ್ಕಾರ ಇಂತಹ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು. ಇದಕ್ಕಾಗಿ ಕೊಲೆ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಬೇಕು. ಈ ಬಗ್ಗೆ ಕಾನೂನು ಜಾರಿಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಲತಾ ಆರಾಧ್ಯ ಮಾತನಾಡಿ, ಆರೋಪಿಯಿಂದ ಬೆದರಿಕೆ ಬಂದಂತಹ ಸಂದರ್ಭದಲ್ಲಿ ಅಂಜಲಿ ತನ್ನ ತಾಯಿಯೊಂದಿಗೆ ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋದರೂ ಪೊಲೀಸರು ಸ್ಪಂದಿಸಲಿಲ್ಲ. ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಯ ವಹಿಸಿದ್ದರಿಂದಲೇ ಈ ಕೊಲೆ ನಡೆದಿದೆ ಎಂದು ಆರೋಪಿಸಿದರು.

ಇಂತಹ ಪ್ರಕರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ನೇಹಾ ಪ್ರಕರಣದಲ್ಲಿ ಕೊಲೆಗಾರನ್ನು ಎನ್ ಕೌಂಟರ್ ಮಾಡಿದ್ದರೆ ಈಗ ಘಟನೆ ನಡೆಯುತ್ತಿರಲಿಲ್ಲ. ಪೊಲೀಸ್ ವ್ಯವಸ್ಥೆ ಸರ್ಕಾರದ ಕೈಗೊಂಬೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ವಕ್ತಾರರಾದ ಪ್ರಶಾಂತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಬಂದ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ಅಂಜಲಿ ಕೊಲೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಗೃಹ ಸಚಿವ ಪರಮೇಶ್ವರ ಸೇರಿದಂತೆ ರಾಜ್ಯ ಸರ್ಕಾರದ ಯಾವ ಸಚಿವರೂ ಯುವತಿಯ ಕೊಲೆಯನ್ನು ಖಂಡಿಸಿ, ಯಾವ ಹೇಳಿಕೆಯನ್ನೂ ನೀಡಿಲ್ಲ. ಜನರು ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ ಕೊಲೆಯಾಗಿರುವ ಅಂಜಲಿ ಅವರ ಕುಟುಂಬಕ್ಕೆ ಸೂಕ್ತ ಸಹಾಯಧನ ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ನಾಗಮ್ಮ, ಲಕ್ಷ್ಮಿ,ಪವಿತ್ರ, ಮಮತಾ, ವರಲಕ್ಷ್ಮಿ, ಸಾನ್ವಿ, ಅನುಪಮ, ರಾಧಾ, ರೇಖಾ, ಸವಿತಾ, ಮೀನಾಕ್ಷಿ, ಯಲ್ಲಮ್ಮ, ಮುಖಂಡರಾದ ರುದ್ರದೇವರು, ಶಿವಾನಂದ, ಚಂದ್ರಶೇಖರ್, ಕಾಳಯ್ಯ, ಸಿದ್ದಲಿಂಗಮೂರ್ತಿ, ರಾಘವ್, ಜೆಡಿಎಸ್ ಮುಖಂಡರಾದ ಜಯಕುಮಾರ್ ,ಕೆಂಪರಾಜು, ಕೊತ್ತೀಪುರ ಸುರೇಶ್ ಮತ್ತತಿರರು ಭಾಗವಹಿಸಿದ್ದರು.18ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Share this article