ವಿಜಯೇಂದ್ರರನ್ನು ಕೆಳಗಿಳಿಸಲುಬಿಜೆಪಿಯಿಂದ್ಲೇ ಯತ್ನ: ಮಧು

KannadaprabhaNewsNetwork |  
Published : Oct 27, 2024, 02:34 AM IST
ಪೊಟೋ೨೬ಎಸ್.ಆರ್.ಎಸ್೧ (ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.) | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಳಿಸಲು ಅವರ ಪಕ್ಷದವರೇ ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿರಸಿ: ಮುಡಾ ಪ್ರಕರಣದ ನೆಪದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಳಿಸಲು ಅವರ ಪಕ್ಷದವರೇ ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ ಎಂದರು.

ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಹರಿಹಾಯುತ್ತಿದ್ದ ಕುಮಾರಸ್ವಾಮಿ ತಮ್ಮ ಮಗ ನಿಖಿಲ್‌ ಅವರಿಗೆ ಚನ್ನಪಟ್ಟಣ ಟಿಕೆಟ್ ಪಡೆಯಲು ಯಡಿಯೂರಪ್ಪ ಕಾಲಿಗೆ ಬಿದ್ದಿದ್ದಾರೆ. ಈಗ ಆ ತತ್ವ, ಸಿದ್ಧಾಂತ ಎಲ್ಲಿ ಹೋದವು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಬಕಾಸುರರಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ನುಂಗಿ ಹಾಕುತ್ತಾರೆ ಎಂದ ಅವರು, ಸಿ.ಪಿ. ಯೋಗೇಶ್ವರ ಕಾಂಗ್ರೆಸ್ ಸೇರುತ್ತಾರೆ ಎಂಬುದು ಮೊದಲು ಗೊತ್ತಿತ್ತು. ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಹೊರತುಪಡಿಸಿ, ಉಳಿದ ೨ ಕಡೆಗಳಲ್ಲಿ ಉತ್ತಮ ವಾತಾವರಣವಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಹಾಗೂ ಉಳಿದ ಸಚಿವರ ಪ್ರಯತ್ನದಲ್ಲಿ ಚನ್ನಪಟ್ಟಣವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾನೂನು ಹೋರಾಟದಲ್ಲಿ ಸೈಲ್ ಗೆಲ್ತಾರೆ: ಬೇಲೆಕೇರಿ ಅದಿರು ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಕುರಿತು ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾನೂನು ಹೋರಾಟದಲ್ಲಿ ಅವರಿಗೆ ಗೆಲುವು ಸಾಧ್ಯವಾಗುತ್ತದೆ ಎಂದರು.

ಹೆಬ್ಬಾರ ಶೀಘ್ರ ಕಾಂಗ್ರೆಸ್‌ಗೆ: ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್‌ ಸೇರಲಿದ್ದು, ಅವರೊಂದಿಗೆ ಯಲ್ಲಾಪುರ ಶಾಸಕ ಶಿವರಾಜ ಹೆಬ್ಬಾರ ಸಹ ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಹೆಬ್ಬಾರ್ ಮೂಲ ಕಾಂಗ್ರೆಸಿಗರು. ಅವರು ಬಂದರೆ ನಮ್ಮ ಅಭ್ಯಂತರವಿಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!