ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಈ ಹಿಂದಿನ ಹತ್ಯೆ ಘಟನೆಗಳಲ್ಲಿ ಬಂಧಿತ ಆರೋಪಿಗಳ ಚಿತ್ರವನ್ನು ಬಹಿರಂಗವಾಗಿಯೇ ಪೊಲೀಸರು ಬಿಡುಗಡೆ ಮಾಡುತ್ತಿದ್ದರು. ಈ ಘಟನೆಯಲ್ಲಿ ಬಂಧಿತ ಆರೋಪಿಗಳಿಗೆ ಮುಸುಕು ಹಾಕಿದ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಘಟನೆ ವೇಳೆ ಆರೋಪಿಗಳ ಪಲಾಯನಕ್ಕೆ ಸಹಕರಿಸುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸುವುದಾಗಿ ಹೇಳಿದರು.
ಏಕಪಕ್ಷೀಯ ಸಭೆ ಸರಿಯಲ್ಲ:ಮಂಗಳೂರಿಗೆ ಆಗಮಿಸಿದ ರಾಜ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಶಾಸಕರು, ಸಂಸದರು ಇದ್ದರೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕೇವಲ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸುವ ಮೂಲಕ ಸಚಿವರು ಏಕಪಕ್ಷೀಯವಾಗಿ ವರ್ತಿಸಿದ್ದಾರೆ. ಸಚಿವರುಗಳ ಈ ನಡವಳಿಕೆ ಸರಿಯಾದ ಕ್ರಮವಲ್ಲ ಎಂದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಹರೀಶ್ ಪೂಂಜಾ, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ವಸಂತ ಪೂಜಾರಿ, ಸಂಜಯ ಪ್ರಭು, ನಂದನ್ ಮಲ್ಯ ಮತ್ತಿತರರಿದ್ದರು.
ಸ್ಪೀಕರ್ ಆಗಿ ಮಹತ್ವದ ಸ್ಥಾನದಲ್ಲಿರುವ ಯು.ಟಿ.ಖಾದರ್ ಅವರು ಸುಹಾಸ್ ಹತ್ಯೆಯಲ್ಲಿ ಫಜಲ್ ಹತ್ಯೆಯ ಪ್ರತೀಕಾರ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.ಈಗ ಪೊಲೀಸ್ ಕಮಿಷನರ್ ಅವರೇ ಸುದ್ದಿಗೋಷ್ಠಿಯಲ್ಲಿ, ಸುಹಾಸ್ ಹತ್ಯೆಯಲ್ಲಿ ಫಾಜಲ್ನ ಸಹೋದರನೇ ಸುಪಾರಿ ನೀಡಿರುವ ಅಂಶವನ್ನು ಹೇಳಿದ್ದಾರೆ. ಈ ಮೂಲಕ ಯು.ಟಿ.ಖಾದರ್ ಅವರ ನಿಜ ಬಣ್ಣ ಅನಾವರಣಗೊಂಡಿದೆ ಎಂದು ಸತೀಶ್ ಕುಂಪಲ ಹೇಳಿದರು.