ಪಟ್ಟಣದಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು
ಕೊಪ್ಪ ಮಂಡಳ ಬಿಜೆಪಿ ಕಾರ್ಯಕರ್ತರ ಪರಿವಾರ ಸಮಾಗಮ ಸಮಾವೇಶ ಮಾ.೨೪ ರ ಭಾನುವಾರ ಬೆಳಿಗ್ಗೆ ೧೦ ಕ್ಕೆ ಪಟ್ಟಣದ ಪುರಭವನದಲ್ಲಿ ನಡೆಯಲಿದೆ ಕೊಪ್ಪ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ತಿಳಿಸಿದ್ದಾರೆ. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ಸಂದರ್ಭದಲ್ಲಿ ಮಂಡಲ ಘಟಕದ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ನಡೆಯಲಿದೆ ಎಂದ ಅವರು, ಪ್ರಧಾನಿ ಮೋದಿಯವರ ಕನಸು ಗಳನ್ನು ಸಾಕಾರಗೊಳಿಸಲು ಲೋಕಸಭಾ ಚುನಾವಣೆ ಎದುರುಗೊಂಡಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗೂಡಿ ಶ್ರಮಿಸಲಾಗುತ್ತಿದೆ ಎಂದರು.
ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ಜಿ.ಎಸ್.ಮಹಾಬಲ ರಾವ್ ಮಾತನಾಡಿ, ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ವ್ಯವಸ್ಥೆ ಉನ್ನತ ಮಟ್ಟಕ್ಕೆ ತಲುಪಿದೆ. ದೇಶ ಅಭಿವೃದ್ಧಿ ದಿಕ್ಕಿನಲ್ಲಿ ಸಾಗುತ್ತಿದೆ. ದೇಶದ ಬೆಳವಣಿಗೆ ವಿಶ್ವದ ಗಮನ ಸೆಳೆದಿದೆ ಎಂದರು.‘ಲೋಕಸಭಾ ಕ್ಷೇತ್ರದಲ್ಲಿಯೂ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತು ತಿರುಗಾಡಿ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ. ಇನ್ನೊಮ್ಮೆ ಕ್ಷೇತ್ರಾದ್ಯಂತ ಓಡಾಡಿ ಕಾರ್ಯಕರ್ತರನ್ನು ಸಂಘಟಿಸಲಿದ್ದಾರೆ’ ಎಂದು ತಿಳಿಸಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಶಿವಪುರ, ಎಚ್.ಡಿ.ಜಯಂತ್, ರೇವಂತ್ ಗೌಡ, ಎಚ್.ಆರ್.ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.