ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕನಕ ಸಮುದಾಯ ಭವನದಲ್ಲಿ ಸಿಎಂ ವಿರುದ್ಧದ ಬಿಜೆಪಿ- ಜೆಡಿಎಸ್ ಪಾದಯಾತ್ರೆಗೆ ಅಹಿಂದ ಪ್ರತಿರೋಧ ಸಮಾವೇಶ ನಡೆಸುವ ಜಾಗೃತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿರುವುದನ್ನು ಬಿಜೆಪಿ ಪಕ್ಷದವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರಿಗೆ ಇರುವ ಶಕ್ತಿ, ವರ್ಚಸ್ಸನ್ನು ಕುಗ್ಗಿಸಲು ಮುಡಾ ಹಾಗೂ ವಾಲ್ಮೀಕಿ ಹಗರಣಗಳಲ್ಲಿ ಅವರ ಹೆಸರನ್ನು ತಳುಕು ಹಾಕಲಾಗಿದೆ. ಇದರ ಸತ್ಯಾಸತ್ಯತೆ ರಾಜ್ಯದ ಜನತೆ ಹಾಗೂ ಬಿಜೆಪಿಯವರಿಗೂ ಗೊತ್ತು. ಆದರೂ ಇಲ್ಲದ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.ಜಮೀನು ಕೊಟ್ಟಾಗ ನಿವೇಶನ ಕೊಡುವುದು ಸಾಮಾನ್ಯ, ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಕಾನೂನು ವಿರುದ್ಧ ಹೋರಾಟ ಮಾಡುತ್ತಿದ್ದಾರೆ, ಇದಕ್ಕೆ ಉತ್ತರ ಕೊಡಲು ನಾವೆಲ್ಲರೂ ಸಿದ್ದರಾಮಯ್ಯರವರ ಜೊತೆಯಲ್ಲಿ ಇರಬೇಕು ಎಂದು ಹೇಳಿದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಮಾತನಾಡಿ, ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸುವ ಕುತಂತ್ರವನ್ನು ಬಿಜೆಪಿ, ಜೆಡಿಎಸ್ ನಾಯಕರು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಶೋಷಿತ ಸಮುದಾಯಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಸಿದ್ದರಾಮಯ್ಯ. ಹಿಂದೆಯೂ ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮಸಿಂಗ್ ಮತ್ತಿತರರ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು. ಈಗ ಶೋಷಿತ ಸಮುದಾಯ ಜಾಗೃತವಾಗಿದ್ದು, ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಕುತಂತ್ರವನ್ನು ಮುಂದುವರಿಸಿದರೆ ದಂಗೆ ಏಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಕೆ.ಎಚ್.ನಾಗರಾಜು, ಸುಬ್ಬಣ್ಣ,ಅಯೂಬ್ ಖಾನ್, ಎಂ.ಎಸ್.ಚಿದಂಬರ್, ದೇವರಾಜ್, ನಾಗೇಂದ್ರ, ಎನ್.ದೊಡ್ಡಯ್ಯ, ಸಾತನೂರು ರಾಜು, ಶಶಿಧರ್ ಇತರರು ಉಪಸ್ಥಿತರಿದ್ದರು.