ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಆರೋಗ್ಯ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಇದಕ್ಕಾಗಿ ಸರ್ಕಾರ ನಿಯಮಾವಳಿ ರೂಪಿಸಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಭದ್ರತೆಯನ್ನು ಒದಗಿಸುವುದು. ಇದನ್ನು ಖಾತ್ರಿಪಡಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಆಗ್ರಹಿಸಿದರು.ಬಾಣಂತಿಯರ ಸಾವಿಗೆ ನೈಜ ಕಾರಣಗಳನ್ನು ತಿಳಿದು ಅದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಬಳ್ಳಾರಿ, ಬೆಳಗಾವಿ, ತಿಪಟೂರು, ಬೆಂಗಳೂರು, ಕೊಪ್ಪಳ, ರಾಯಚೂರು, ಕಲ್ಬುರ್ಗಿಯಿಂದ ಬರುತ್ತಿರುವ ವರದಿಗಳ ಪ್ರಕಾರ ಈ ಸಾವುಗಳಿಗೆ ಸರ್ಕಾರ ಬಳಸುತ್ತಿರುವ ಕಳಪೆ ಗುಣಮಟ್ಟದ ಔಷಧಗಳು ಕಾರಣವಾಗಿವೆ. ಅಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರವೂ ಬಾಣಂತಿಯರು, ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಹೊಣೆಗೇಡಿತನದಿಂದ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೊರಗುತ್ತಿವೆ. ಆ್ಯಂಬುಲೆನ್ಸ್ ಚಾಲಕರಿಗೆ ಸರ್ಕಾರ ವೇತನ ನೀಡುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ಬ್ಲಡ್ ಬ್ಯಾಂಕ್ ಕೊರತೆ ಇದೆ. ಸರ್ಕಾರ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಿ ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿಲ್ಪ, ಮನ್ಮುಲ್ ನಿರ್ದೇಶಕಿ ರೂಪಾ, ಮುಖಂಡರಾದ ಸೌಮ್ಯ, ಶೃತಿ, ಶೋಭಾ, ಮಂಜುಳಾ, ಜಾನಕಿ, ವಿದ್ಯಾ ನಾಗೇಂದ್ರ, ಸಿ.ಟಿ. ಮಂಜುನಾಥ್, ಭೀಮೇಶ್, ನಿತ್ಯಾನಂದ, ನವೀನ್ಕುಮಾರ್ ಸೇರಿ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.