ಉಪರಾಷ್ಟ್ರಪತಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Dec 22, 2023 1:30 AM

ಸಾರಾಂಶ

ದೆಹಲಿಯ ಸಂಸತ್ ಭವನದ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್‌ ಹಾಗೂ ಲೋಕಸಭೆಯ ಸಭಾಪತಿಗಳಿಗೆ ಅವಮಾನಕರ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಿದ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಐಎನ್‌ಡಿಐ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾವೇರಿ

ದೆಹಲಿಯ ಸಂಸತ್ ಭವನದ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್‌ ಹಾಗೂ ಲೋಕಸಭೆಯ ಸಭಾಪತಿಗಳಿಗೆ ಅವಮಾನಕರ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಿದ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಐಎನ್‌ಡಿಐ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ಅವಮಾನಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಹಾಗೂ ಐಎನ್‌ಡಿಐ ಒಕ್ಕೂಟ ಮಾಡುತ್ತಿರುವ ಅವಮಾನ. ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ ಬ್ಯಾನರ್ಜಿ ಉಪರಾಷ್ಟ್ರಪತಿಯವರನ್ನು ಲೇವಡಿ ಮಾಡಿದ್ದು ಉಪರಾಷ್ಟ್ರಪತಿಯಂಥ ಸಾಂವಿಧಾನಿಕ ಹುದ್ದೆಗೆ ಮತ್ತು ಪ್ರಜಾಪ್ರಭುತ್ವಕ್ಕೆ ಐಎನ್‌ಡಿಐ ಒಕ್ಕೂಟದ ಸದಸ್ಯರು ಮಾಡಿದ ಅಪಮಾನ ಎಂದು ದೂರಿದರು.

ಉತ್ತರಭಾರತದ ಮೂರು ದೊಡ್ಡ ರಾಜ್ಯಗಳ ಚುನಾವಣಾ ಫಲಿತಾಂಶವು ಮೋದಿ ಗ್ಯಾರಂಟಿಯ ಪರವಾಗಿರುವುದನ್ನ ನೋಡಿ ಐಎನ್‌ಡಿಐ ಒಕ್ಕೂಟದ ನಾಯಕರಿಗೆ ನಿದ್ದೆ ಬರುತ್ತಿಲ್ಲ. ವಿನಾಕಾರಣ ದೇಶದ ಭದ್ರತೆಯ ಬಗ್ಗೆ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರಿಸುವಂತಹ ಕೃತ್ಯವನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಶಾಸಕ ಅರುಣಕುಮಾರ ಪೂಜಾರ್ ಮಾತನಾಡಿ, ಈ ದೇಶವನ್ನು ೬೩ ವರ್ಷ ಆಳಿದ ಕಾಂಗ್ರೆಸ್ ಈ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಅಗೌರವದಿಂದ ನಡೆಸಿಕೊಂಡು ಬಂದಿದೆ. ಕಾಂಗ್ರೆಸ್ ಹಾಗೂ ಐಎನ್‌ಡಿಐ ಒಕ್ಕೂಟ ಈಗ ಪ್ರಬಲವಾಗಿ ಭಾರತ ಜಗತ್ತಿನ ಮುಂದೆ ತಲೆ ಎತ್ತಿ ನಿಲ್ಲುತ್ತಿರುವುದನ್ನು ನೋಡಿ ಸಹಿಸಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

ಮಾಜಿ ಶಾಸಕ ಶಿವರಾಜ್ ಸಜ್ಜನರ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಷ್ಟು ಅಪಾಯಕಾರಿಯೋ ಅದಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಅಧಿಕಾರ ಹಿಡಿಯಲು ವರ್ತಿಸುತ್ತದೆ. ಐಎನ್‌ಡಿಐ ಒಕ್ಕೂಟದ ಈ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯನ್ನು ದೇಶದ ಜನತೆ ಮತ್ತು ಬಿಜೆಪಿ ಕಾರ್ಯಕರ್ತರು ಪ್ರಬಲವಾಗಿ ಖಂಡಿಸಬೇಕು ಎಂದರು.

ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಉಪರಾಷ್ಟ್ರಪತಿಗಳ ಬಗ್ಗೆ ವಿಪಕ್ಷಗಳು ಮಾಡಿದ ಅಣಕು ಪ್ರದರ್ಶನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಸ್ವಾತಂತ್ರ್ಯ ಹೊಂದಿದ್ದಾರೆ ಆದರೆ, ಈ ಸ್ವಾತಂತ್ರ್ಯ ಘನತೆ ಮತ್ತು ಸೌಜನ್ಯದ ಮಾನದಂಡದ ಒಳಗೆ ಇರಲಿ ಅಂತ ಸಂಸದೀಯ ಸಂಪ್ರದಾಯದಿಂದ ನಾವು ಹೆಮ್ಮೆ ಪಡಲು ಸಾಧ್ಯ ಎಂದು ಹೇಳಿರುವುದು ವಿಪಕ್ಷಗಳ ಬಗ್ಗೆ ರಾಷ್ಟ್ರಪತಿಗಳ ಬೇಸರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು.

ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು ಮತ್ತು ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಇದ್ದರು.

Share this article