ಶಿರಸಿ: ಮಳೆಗಾಲ ಸಮೀಪಿಸುತ್ತಿದ್ದರೂ ನಗರಸಭೆಯಿಂದ ಯಾವುದೇ ಸಿದ್ಧತೆ ನಡೆಸದಿರುವುದು ಮತ್ತು ನಗರದಲ್ಲಿ ಹಲವಾರು ಅವೈಜ್ಞಾನಿಕ ಕಾಮಗಾರಿಗಳು ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಶುಕ್ರವಾರ ನಗರಸಭೆ ವಿರುದ್ಧ ಪ್ರತಿಭಟನೆ ಮಾಡಿದರು.
ಹಂದಿ ಕಾಟ ಮತ್ತು ಬೀದಿನಾಯಿಗಳ ಕಾಟ ತಡೆಯಲು ನಗರಸಭೆ ವಿಫಲವಾಗಿದೆ. ಹಂದಿ, ನಾಯಿ ಕಾಟದಿಂದ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ, ಇದಕ್ಕೆ ಹೊಣೆ ಯಾರು ಎಂದು ಪ್ರಶ್ನೆ ಮಾಡಿದರು.
ಮಳೆಗಾಲ ಸಮೀಪಿಸುತ್ತಿದ್ದರೂ ನಗರಸಭೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಎಲ್ಲೆಲ್ಲಿ ಅರ್ಧಂಬರ್ಧ ಕಾಮಗಾರಿ ನಡೆದಿದೆಯೋ ಅವುಗಳನ್ನೆಲ್ಲ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.ನಗರಸಭೆ ಮಾಜಿ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಮಾತನಾಡಿ, ಮಳೆಗಾಲ ಹತ್ತಿರ ಬಂದರೂ ಸಿದ್ಧತೆ ಶಾಸಕರು ಇದುವರೆಗೂ ನಗರಸಭೆಯಲ್ಲಿ ಅಧಿಕಾರಿಗಳ ಸಭೆ ಕರೆದಿಲ್ಲ. ಪಂಡಿತ್ ಸಾರ್ವಜನಿಕ ಆಸ್ಪತ್ರೆಯಿಂದ ಅವೇ ಮರಿಯಾ ಶಾಲೆಯ ಮುಂಭಾಗ ರಸ್ತೆ ಅಗಲೀಕರಣ ಮಾಡದೇ ಲೋಕೋಪಯೋಗಿ ಇಲಾಖೆ ಸಿಡಿ ನಿರ್ಮಿಸುತ್ತಿರುವುದು ಸರಿಯಲ್ಲ. ಈ ಇಕ್ಕಟ್ಟಾದ ರಸ್ತೆಯಲ್ಲಿ ಅಪಘಾತ ಸಂಭವಿಸಿದರೆ ಯಾರು ಹೊಣೆ? ನಾಲ್ಕೈದು ತಿಂಗಳ ಹಿಂದೆಯೇ ಶಾಸಕರು ನಗರೋತ್ಥಾನ ಕಾಮಗಾರಿ ಸಂಪೂರ್ಣವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರೂ ಇದುವರೆಗೂ ಪೂರ್ಣಗೊಳಿಸಿಲ್ಲ ಎಂದು ಹೇಳಿದರು.
ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ: ನಗರದಲ್ಲಿ ಈಗಾಗಲೇ ಶೇ. 80 ಕಾಮಗಾರಿ ಮುಗಿದಿದೆ. ಇನ್ನುಳಿದ ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಮಳೆ ಬರುವುದರೊಳಗಾಗಿ ಎಲ್ಲ ಕಾಮಗಾರಿಗಳನ್ನು ಮುಗಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಶಿರಸಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮೊನ್ನೆ ಮಳೆ ಬಂದಿರುವ ಕಾರಣ ಕೆಂಗ್ರೆ ಹೊಳೆಯಲ್ಲಿ ನೀರಿದೆ. ಅದನ್ನು ಹೊರತುಪಡಿಸಿ ನಗರಸಭೆಯಿಂದ 23 ಕೊಳವೆಬಾವಿ ತೋಡಿಸಲಾಗಿದೆ. ಸಾರ್ವಜನಿಕರಿಗೆ ನೀರಿನ ತೊಂದರೆ ಆಗುವುದಿಲ್ಲ ಎಂದು ಶಿರಸಿ ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್ ಹೇಳಿದರು.