ಕನ್ನಡಪ್ರಭ ವಾರ್ತೆ ರಾಮನಗರನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರು ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ನಗರದ ಐಜೂರು ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.1938 ರಲ್ಲಿ ಪ್ರಾರಂಭವಾಗಿ ಹಾಲಿ 2,500 ಕೋಟಿ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಕೇವಲ 50 ಲಕ್ಷ ರು.ಗಳಿಗೆ ಖರೀದಿಸಿ ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪ ಸೋನಿಯಾ, ರಾಹುಲ್ ಮೇಲಿದೆ. ಈ ಬಗ್ಗೆ ಇ.ಡಿ. ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಗೌಡ ಮಾತನಾಡಿ, ಗಾಂಧೀಜಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ನಕಲಿ ಗಾಂಧಿಗಳ ಕುಟುಂಬ ದೇಶವನ್ನು ಲೂಟಿ ಮಾಡಿದೆ. ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದ ನ್ಯಾಷನಲ್ ಹೆರಾಲ್ಡ್ ಸಂಸ್ಥೆ, ಇದು, ಕೇವಲ ಐದು ಜನರ ಕೈಯಲ್ಲಿರುವುದು ದುರ್ದೈವದ ಸಂಗತಿ ಎಂದು ಆರೋಪಿಸಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮುಖವಾಣಿಯಾಗಿ ಕಾರ್ಯನಿರ್ವಹಿಸಿದ ಸಂಸ್ಥೆ ಇಂದು ನಕಲಿ ಗಾಂಧಿಗಳ ಕುಟುಂಬದಲ್ಲಿ ಸಿಲುಕಿ ಭಾರೀ ಭ್ರಷ್ಟಾಚಾರ ನಡೆಸಿದೆ. 2014 ರಲ್ಲಿ ನ್ಯಾ.ಸುಬ್ರಹ್ಮಣ್ಯಸ್ವಾಮಿ ದಾಖಲಿಸಿದ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ಮಂದಿ ಭ್ರಷ್ಟಾಚಾರ ಶಾಮೀಲಾಗಿದ್ದಾರೆಂದು ಆರೋಪಿಸಲಾಗಿತ್ತು.ಕಾಂಗ್ರೆಸ್ ನಾಯಕರು ರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಂವಿಧಾನಕ್ಕೆ ಅವಮಾನಿಸಿದ್ದಾರೆ. ಸತ್ಯ ಬಯಲಿ ಗೆಳೆಯಲು ಕೇಂದ್ರ ಸರ್ಕಾರ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದಾಗ ಕೆಲವು ನಕಲಿ ಗೂಂಡಾಗಳನ್ನು ಕಾಂಗ್ರೆಸ್ ನಾಯಕರು ಬಳಸಿಕೊಂಡು ಇಡಿ ಕಚೇರಿ ಮುಂಭಾಗ ಪ್ರತಿಭಟನೆ ನಾಟಕವಾಡಿ ದೇಶದ ಜನತೆಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ದೂರಿದರು.