ಬಳ್ಳಾರಿ: ರಾಜ್ಯದ ಮಠ-ಮಾನ್ಯಗಳು, ರೈತರ ಜಮೀನುಗಳು ವಕ್ಫ್ ಮಂಡಳಿಗೆ ವರ್ಗಾವಣೆಯಾಗುತ್ತಿರುವುದನ್ನು ಖಂಡಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಈ ಹಿಂದಿನ ನಿಜಾಮರು, ನವಾಬರಂತೆ ವರ್ತಿಸುತ್ತಿದೆ. ವಕ್ಫ್ ಬೋರ್ಡ್ ರೈತರ ಜಮೀನಿನ ಮೇಲೆ ಕಣ್ಣಾಯಿಸಿದ ಬಳಿಕ ಬೆಳಿಗ್ಗೆ ಎದ್ದು ರೈತರು ಪಹಣಿಯನ್ನು ಪರಿಶೀಲಿಸಿಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಜನವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟ ನಿರಂತರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ವಕ್ಫ್ ಬೋರ್ಡ್ ರದ್ದು ಮಾಡಬೇಕು. ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಘೋಷಣೆಗಳನ್ನು ಕೂಗಿದರು.ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಮೋಕಾ, ಮುಖಂಡರಾದ ಎಸ್.ಗುರುಲಿಂಗನಗೌಡ, ಗಣಪಾಲ್ ಐನಾಥರೆಡ್ಡಿ, ಕೆ.ಎಂ. ಮಹೇಶ್ವರಸ್ವಾಮಿ, ಪಾಟೀಲ್ ಸಿದ್ದಾರೆಡ್ಡಿ, ಡಾ.ಅರುಣಾ ಕಾಮಿನೇನಿ, ಮಾಜಿ ಶಾಸಕ ಸೋಮಲಿಂಗಪ್ಪ, ಡಾ.ಎಸ್.ಜೆ.ವಿ. ಮಹಿಪಾಲ್, ಮಲ್ಲೇಶ್ ಕುಮಾರ್, ಪಾಲಿಕೆ ಸದಸ್ಯ ಗುಡಿಗಂಟಿ ಹನುಮಂತು, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಗುಣಾ, ದಮ್ಮೂರು ಶೇಖರ್, ಪುಷ್ಪಾ ಚಂದ್ರಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಕ್ಫ್ ಮಂಡಳಿ ವಿರುದ್ಧ ಬಳ್ಳಾರಿ ಡಿಸಿ ಕಚೇರಿ ಎದುರು ಬಿಜೆಪಿಯ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.