ಹೆಗಡೆಕಟ್ಟಾ-ಶಿವಳ್ಳಿ ಗ್ರಾಪಂ ಎದುರು ಬಿಜೆಪಿಯಿಂದ ಪ್ರತಿಭಟನೆ

KannadaprabhaNewsNetwork |  
Published : Jul 02, 2025, 11:50 PM IST
ಪೊಟೋ೨ಎಸ್.ಆರ್.ಎಸ್೧ (ತಾಲೂಕಿನ ಹೆಗಡೆಕಟ್ಟಾ-ಶಿವಳ್ಳಿ ಗ್ರಾಪಂ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಗ್ರಾಪಂ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.) | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಪ್ರತಿ ವ್ಯವಸ್ಥೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿರುವುದರಿಂದ ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ

ಶಿರಸಿ: ರಾಜ್ಯ ಸರ್ಕಾರದ ಪ್ರತಿ ವ್ಯವಸ್ಥೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿರುವುದರಿಂದ ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಗ್ರಾಮೀಣ ಮಂಡಳದಿಂದ ತಾಲೂಕಿನ ಹೆಗಡೆಕಟ್ಟಾ-ಶಿವಳ್ಳಿ ಗ್ರಾಪಂ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಪಿಡಿಒಗೆ ಮನವಿ ಸಲ್ಲಿಸಲಾಯಿತು.

ನಿವೇಶನಗಳ ಸಮಸ್ಯೆ, ಅಕ್ರಮ-ಸಕ್ರಮ ಅರ್ಜಿ ತಿರಸ್ಕರಿಸಿರುವುದು, ಹೊಸ ಆಶ್ರಯ ಮನೆಗಳ ಮಂಜೂರಾತಿ, ವೃದ್ಧಾಪ್ಯ, ವಿಧವಾ ವೇತನ, ಗ್ರಾಮೀಣ ರಸ್ತೆಗಳ ದುರಸ್ತಿ, ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಮಾಜಿ ಸದಸ್ಯ ಆರ್.ಡಿ. ಹೆಗಡೆ ಜಾನ್ಮನೆ ಮಾತನಾಡಿ, ಸರ್ಕಾರದ ಅವ್ಯವಸ್ಥೆ ಕಾರಣದಿಂದ ಪ್ರತಿ ಗ್ರಾಪಂ ಮಟ್ಟದಲ್ಲಿ ರೈತರು, ಕೂಲಿಕಾರ್ಮಿಕರು, ದಲಿತರು, ಬಡವರು ಸಮಸ್ಯೆ ಎದುರಿಸುವಂತಾಗಿದ್ದು, ಗ್ರಾಮೀಣ ಜನರಿಗೆ ಧ್ವನಿಯಾಗಲು ತಾಲೂಕಿನ ಪ್ರತಿ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದ ಇತಿಹಾಸದಲ್ಲಿ ಗ್ರಾಪಂ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಂಡ ಉದಾಹಣೆ ಇಲ್ಲವಾಗಿತ್ತು. ಧರಣಿ ಹಮ್ಮಿಕೊಳ್ಳುವ ಸ್ಥಿತಿ ಕಾಂಗ್ರೆಸ್ ಸರ್ಕಾರ ತಂದಿಟ್ಟಿದೆ. ಆಡಳಿತ ಕುಸಿತ ಭ್ರಷ್ಟಾಚಾರ ಮಿತಿಮೀರಿದ್ದು, ವಸತಿ ಯೋಜನೆಯಲ್ಲಿ ಅಕ್ರಮ ನಡೆಯುತ್ತಿದೆ. ಲಂಚ ನೀಡಿದರೆ ಮಾತ್ರ ಹಣ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕರು ಹೇಳುತ್ತಿದ್ದಾರೆ. ಗ್ರಾಮೀಣ ಮಟ್ಟದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಆಡಳಿತ ಪಕ್ಷದ ಶಾಸಕರೇ ಭ್ರಷ್ಟ ಸರ್ಕಾರ ಎಂದು ಹೇಳಿಕೆ ನೀಡುತ್ತಿದ್ದಾರೆ. ಪರಿಶುದ್ಧ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ಕೂಪದಲ್ಲಿ ಮುಳುಗಿದ್ದಾರೆ. ಎಸ್ಸಿ, ಎಸ್ಟಿಗಳಿಗೆ ಮೀಸಲಿಟ್ಟ ₹೫೦ ಸಾವಿರ ಕೋಟಿ ಹಣ ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗೆ ನಮ್ಮ ವಿರೋಧವಿಲ್ಲ. ಘೋಷಣೆ ಮಾಡಿರುವ ಯೋಜನೆ ಜನರಿಗೆ ನೀಡಲಿ. ವಸತಿ ಯೋಜನೆಗಳ ಮೂಲಕ ಹಂಚಿಕೆಯಾದ ಮನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ. ಇದರಿಂದ ಮನೆ ನಿರ್ಮಿಸಿಕೊಂಡಿರುವವರು ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಕಣ್ತೆರಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಅಭಿವೃದ್ಧಿ ಶೂನ್ಯ ಆಡಳಿತದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು ಮುಳುಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನೋಂದಣಿ ಶುಲ್ಕ ₹೧೦೦ ಪಡೆಯುತ್ತಿದ್ದಾರೆ. ಪ್ರತಿ ಹಂತದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದ್ದು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹುದ್ದೆಗೆ ಗುದ್ದಾಟ ನಡೆಯುತ್ತಿದ್ದು, ಹಿಂದೂಗಳನ್ನು ಹತ್ತಿಕ್ಕುವ ಕೆಲಸಕ್ಕೆ ಕೈ ಹಾಕಿದೆ. ಮತ್ತೊಮ್ಮೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣಕ್ಕೆ ಕೈ ಹಾಕಿದೆ. ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಜನರ ಸಂಕಷ್ಟ ಆಲಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಕ್ಷೇತ್ರದ ಶಾಸಕರೂ ಸಹ ಆಡಳಿತ ವ್ಯವಸ್ಥೆಯ ಬಗ್ಗೆ ಗಮನ ಹರಿಸುತ್ತಿಲ್ಲ. ಮನೆಗಳಿಗೆ ಆದೇಶ ಪತ್ರ ನೀಡಿದ್ದಾರೆ, ಆದರೆ ಬಿಲ್ ಪಾವತಿ ಆಗುತ್ತಿಲ್ಲ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ನಡೆಯುತ್ತಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ವಿರುದ್ಧ ಹರಿಹಾಯ್ದರು.

ಶಿವಳ್ಳಿ ಗ್ರಾಪಂ ಅಧ್ಯಕ್ಷೆ ರೇಣುಕಾ ಹರಿಜನ, ಜಿಪಂ ಮಾಜಿ ಸದಸ್ಯೆ ಪ್ರಭಾವತಿ ಗೌಡ, ಮಂಜಗುಣಿ ಗ್ರಾಪಂ ಉಪಾಧ್ಯಕ್ಷ ಸತೀಶ ಭಟ್ಟ, ಪಿ.ವಿ.ಹೆಗಡೆ, ಹೆಗಡೆಕಟ್ಟಾ ಗ್ರಾಪಂ ಸದಸ್ಯ ಮಂಜುನಾಥ ಹೆಗಡೆ, ಶೇಖರ ಗೌಡ, ನಾಗರಾಜ ಮರಾಠಿ, ವಿನಾಯಕ ಭೋವಿವಡ್ಡರ್, ದೇವನಳ್ಳಿ ಗ್ರಾಪಂ ಸದಸ್ಯ ನಾರಾಯಣ ಹೆಗಡೆ, ಗಣಪತಿ ಹೆಗಡೆ, ಗಣೇಶ ಹೆಗಡೆ ಹುಣಸೇಕೊಪ್ಪ, ಪ್ರಸನ್ನ ಹೆಗಡೆ, ಶಶಿಕಲಾ ನಾಯ್ಕ, ಈಶ್ವರದಾಸ ನಾಯ್ಕ, ಸುನೀಲ ಭಟ್ಟ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯದಲ್ಲಿ ಪಿಕ್ ಪಾಕೇಟ್ ಸರ್ಕಾರ ಅಧಿಕಾರದಲ್ಲಿದ್ದು, ಅಲ್ಪಸಂಖ್ಯಾತರನ್ನು ಓಲೈಸುವ ಕಾರಣಕ್ಕೆ ಹಿಂದೂ ಮುಖಂಡರನ್ನು ಜೈಲಿಗೆ ತಳ್ಳುವ ಕೆಲಸ ಪೊಲೀಸ್ ಇಲಾಖೆ ಮೂಲಕ ಮಾಡುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯ ಆಡಳಿತದ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುತ್ತಾರೆ ಜಿಪಂ ಮಾಜಿ ಸದಸ್ಯ ಆರ್.ಡಿ. ಹೆಗಡೆ ಜಾನ್ಮನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರಣಿ ಸ್ಥಳಕ್ಕೆ ಎಡಿಸಿ ಭೇಟಿ: ಪಟ್ಟು ಬಿಡದ ರೈತರು
ಸಂಕ್ರಮಣದ ಸಂಭ್ರಮದ ತೆಪ್ಪೋತ್ಸವ