- ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯ । ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಸಚಿವರು, ಶಾಸಕರು ಸಾವಿರಾರು ಕೋಟಿ ರು. ಹಣವನ್ನು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈಸುತ್ತಿದೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಂಡರೆ ಯಾವುದೇ ಜಿಲ್ಲೆ ಅಥವಾ ತಾಲೂಕಿಗೆ ಸಿದ್ದರಾಮಯ್ಯ ಸರ್ಕಾರ ಅನುದಾನ ನೀಡಿಲ್ಲ. ಕೇವಲ ಗ್ಯಾರಂಟಿ ಯೋಜನೆಗೆ ಹಣ ಒದಗಿಸುವುದೇ ದೊಡ್ಡ ಸಾಧನೆಯಾಗಿದೆ ಎಂದು ಭಾವಿಸಿದ್ದಾರೆಂದರು.
ಜನಸಾಮಾನ್ಯರ ಬದುಕಿನಲ್ಲಿ ಆಟವಾಡುವ ಜೊತೆಗೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಪ್ರಕರಣ ದಾಖಲಿಸುವುದು, ಸಂಘಟನೆ ಮುಖಂಡರನ್ನು ಅವಮಾನಿಸಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಲದೇ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಿಸಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.ಕ್ಷೇತ್ರದ ಹಿಂದಿನ ಶಾಸಕರ ಅವಧಿಯಲ್ಲಿ ಇಡೀ ಜಿಲ್ಲೆಗೆ ಅಭಿವೃದ್ಧಿಯ ಮಹಾಪೂರವೇ ಒದಗಿಸಿತ್ತು. ಅಲ್ಲದೇ ಸಂಸದರು, ವಿಧಾನ ಪರಿಷತ್ ಸದಸ್ಯರ ಕೊಡುಗೆ ಬಹಳಷ್ಟಿದೆ ಎಂದ ಅವರು, ಹೆಚ್ಚು ಸ್ಥಾನ ಪಡೆದಿರುವ ರಾಜ್ಯ ಸರ್ಕಾರ ಜನತೆ ಋಣ ತೀರಿಸುವ ಕೆಲಸ ಮಾಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.ಇದೀಗ ಕಾಂಗ್ರೆಸ್ನ ಶವ ಪೆಟ್ಟಿಗೆಗೆ ಮೊಳೆ ಒಡೆಯುವ ಕೆಲಸವಾಗುತ್ತಿದೆ. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಕನಸು ಭಗ್ನವಾಗಿದೆ. ರಾಜ್ಯದ ಜನತೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಬಿಜೆಪಿ ಎಲ್ಲಾ ಚುನಾಯಿತರು ಆಯ್ಕೆಯಾಗುವ ಸೂಚನೆಗಳು ರಾಜ್ಯದಲ್ಲಿ ವ್ಯಕ್ತವಾಗುತ್ತಿದೆ ಎಂದು ಹೇಳಿದರು.ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ ಮಾತನಾಡಿ, ಹಿಂದುಳಿದ ವರ್ಗವೆಂದು ಅಧಿಕಾರದ ಚುಕ್ಕಾಣಿ ಹಿಡಿದ ಮುಖ್ಯ ಮಂತ್ರಿಗಳು, ಹಿಂದುಳಿದ ಸಮುದಾಯಕ್ಕೆ ದ್ರೋಹವೆಸಗಿದೆ. ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ನಿರೀಕ್ಷೆಯಲ್ಲಿದ್ದ ಜನಾಂಗಕ್ಕೆ ಬಹಳಷ್ಟು ನಿರಾಸೆಯಾಗಿದೆ ಎಂದರು. ರಾಜ್ಯದ ಮುಖ್ಯಮಂತ್ರಿ ರಾಜಕೀಯ ಹಾಗೂ ಆರ್ಥಿಕವಾಗಿ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಸ್ವಪಕ್ಷದವರು ಅಧಿಕಾರದಿಂದ ಕೆಳಗಿಳಿಸಲು ಮುಂದಾಗಿದ್ದಾರೆ. ಗ್ಯಾರಂಟಿ ಯೋಜನೆಗೆ ಹಣ ಕ್ರೋಡಿಕರಿಸುವಲ್ಲಿ ಮುಖ್ಯಮಂತ್ರಿ ವಿಫಲರಾಗುತ್ತಿದ್ದಾರೆ. ಈ ಕಾರಣದಿಂದ ಅಧಿಕಾರಿಗಳ ಸಭೆ ನಡೆಸದೇ ಕೇವಲ ಸರ್ಕಾರದ ಬೊಕ್ಕಸಕ್ಕೆ ಹಣ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಕಪ್ಪ ಮಾತನಾಡಿ, ರಾಜ್ಯದಲ್ಲಿ ಸುಮಾರು 14ಕ್ಕೂ ಹೆಚ್ಚು ಹಿಂದುಳಿದ ಅಭಿವೃದ್ಧಿ ನಿಗಮಗಳಿವೆ. ಕಳೆದ ಸಾಲಿನಲ್ಲಿ ಮುಖ್ಯಮಂತ್ರಿ ಮಂಡಿಸಿದ ಬಜೆಟ್ನಲ್ಲಿ ₹1,600 ಕೋಟಿ ರು. ಹಿಂದುಳಿದವರಿಗೆ ಮೀಸಲಿರಿಸಿ ವರ್ಗಕ್ಕೆ ನ್ಯಾಯ ಒದಗಿ ಸುತ್ತೇನೆಂದು ಹೇಳಿ, ಒಂದೂವರೆ ವರ್ಷ ಕಳೆದರೂ ಕೇವಲ ₹135 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಹಿಂದುಳಿದವರಿಗೆ ದ್ರೋಹವೆಸಗಿದೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಮಣೇನಹಳ್ಳಿ ರಾಜು, ಯೋಗೀಶ್ ಪೂಜಾರಿ, ನಗರ ಮಂಡಲ ಅಧ್ಯಕ್ಷ ಸಿ.ಟಿ.ಜಯವರ್ಧನ್, ನಗರಸಭಾ ಅಧ್ಯಕ್ಷೆ ಸುಜಾತ ಶಿವಕುಮಾರ್, ಮುಖಂಡರಾದ ಪುಷ್ಪರಾಜ್, ಕುರುವಂಗಿ ವೆಂಕಟೇಶ್, ಎಚ್.ಕೆ. ಕೇಶವಮೂರ್ತಿ, ಹಿರೇಮಗಳೂರು ಪುಟ್ಟಸ್ವಾಮಿ, ಸಂತೋಷ್ ಕೋಟ್ಯಾನ್, ಸೀತಾರಾಮಭರಣ್ಯ, ಕನಕರಾಜ್, ರವೀಂದ್ರ ಬೆಳವಾಡಿ ಹಾಗೂ ಕಾರ್ಯಕರ್ತರು ಇದ್ದರು. 18 ಕೆಸಿಕೆಎಂ 1ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಯಿತು.