ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನ ಇನ್ನು ಕೇವಲ ೧೨ ದಿನಗಳಲ್ಲಿ ನಡೆಯಲಿದ್ದು, ಈ ಕ್ಷೇತ್ರದ ಮಾಜಿ ಸಂಸದರು, ಉತ್ತಮ ಕಾರ್ಯಗಳ ಮೂಲಕ ಹೆಸರುಗಳಿಸಿದ ದಲಿತ ಸಮೂಹದ ನಾಯಕ, ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರ ಪಡೆಯುವಂತೆ ಮಾಡಬೇಕೆಂದು ಮಾಜಿ ಸಚಿವ ಎಚ್.ಆಂಜಯನೇಯ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಮಾತನಾಡಿ, ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಚಿತ್ರದುರ್ಗ ಜಿಲ್ಲೆಯೊಂದಿಗೆ ವಿಶೇಷ ಪ್ರೀತಿ, ಗೌರವ ಹೊಂದಿದ್ದಾರೆ. ಒಂದು ಬಾರಿ ಗೆಲುವು ಸಾಧಿಸಿ, ಒಂದು ಬಾರಿ ಸೋತರು ಸಹ ಜಿಲ್ಲೆಯಲಿದ್ದುಕೊಂಡೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಬಿಜೆಪಿಯ ಪೊಳ್ಳು ಭರವಸೆಗಳಿಗೆ ಜನತೆ ಮಾರುಹೋಗಬಾರದು ಎಂದರು.
ಮೊಳಕಾಲ್ಮುರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಕಳೆದ 10 ವರ್ಷಗಳಿಂದ ರಾಷ್ಟ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಜನತೆಗೆ ನೀಡಿದ ಯಾವುದೇ ಭರವಸೆ ಈಡೇರಿಲ್ಲ, ವಿಶೇಷವಾಗಿ ರಾಜ್ಯಕ್ಕೆ ಬರುವ ಆದಾಯವನ್ನೇ ಕಡಿತಗೊಳಿಸಿದೆ. ಪ್ರತಿಯೊಂದು ಹಂತದಲ್ಲೂ ಸರ್ಕಾರಕ್ಕೆ ಸಹಕಾರ ನೀಡದೆ ಜನವಿರೋಧಿ ಧೋರಣೆತಾಳಿದೆ ಎಂದು ಆರೋಪಿಸಿದರು.ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಮಾತನಾಡಿ, ಸಂವಿಧಾನವನ್ನು ಬದಲಾಯಿಸುವ ದೃಷ್ಟಿ ಹೊಂದಿರುವ ಬಿಜೆಪಿಯನ್ನು ಸೋಲಿಸುವುದೇ ನಮ್ಮೆಲ್ಲರ ಗುರಿಯಾಗಬೇಕು. ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಕಾಂಗ್ರೆಸ್ ಬಗ್ಗೆ ಬಿಜೆಪಿ ಪಕ್ಷ ಲಘು ಮಾತನಾಡುವುದನ್ನು ಕೈಬಿಡಬೇಕು. ಈ ಬಾರಿಯ ಗೆಲುವಿಗೆ 5 ಗ್ಯಾರಂಟಿಗಳ ಕೊಡುಗೆ ಪ್ರಮುಖ ಕಾರಣವಾಗುತ್ತದೆ ಎಂದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ, ಇಂದಿನ ಪ್ರಚಾರ ಸಭೆಗೆ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಆಗಮಿಸಿದ್ದಾರೆ. ನಿಮ್ಮೆಲ್ಲರಲ್ಲೂ ಈ ಬಾರಿ ಚಂದ್ರಪ್ಪನವರನ್ನು ಗೆಲ್ಲಿಸಬೇಕೆಂಬ ಛಲಮೂಡಿದೆ ಎಂದರು.