ಕನ್ನಡಪ್ರಭ ವಾರ್ತೆ ಬಳ್ಳಾರಿ‘ಬಿಜೆಪಿಯ ಪಾದಯಾತ್ರೆ ರಾಜಕೀಯವಲ್ಲ, ಬದಲಿಗೆ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ನಡೆಸುತ್ತಿರುವ ಹೋರಾಟ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ನಡೆಯುತ್ತಿರುವ ಜನಾಂದೋಲನ’ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಗುಡುಗಿದರು.
ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಳೆದ 7 ದಿನಗಳಿಂದ ಬಿಸಿಲು, ಮಳೆ ಎನ್ನದೆ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ಪ್ರತಿಯೊಂದು ಹೆಜ್ಜೆಯೂ ಜನರ ಸಮಸ್ಯೆಗಳ ಪರವಾದ ಹೋರಾಟದ ಸಂಕೇತವಾಗಿದೆ. ಪಾದಯಾತ್ರೆಗೆ ದಿನದಿಂದ ದಿನಕ್ಕೆ ದೊರೆಯುತ್ತಿರುವ ಜನಬೆಂಬಲವೇ ಸರ್ಕಾರದ ವಿರುದ್ಧ ಜನರಲ್ಲಿ ಮೂಡಿರುವ ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದರು.ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವು ಭರವಸೆಗಳನ್ನು ನೀಡಿದ್ದರೂ, ರೈತರು, ಯುವಕರು, ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಜನರ ಧ್ವನಿಯನ್ನು ಆಲಿಸುವ ಬದಲು ಸರ್ಕಾರ ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಸಂಸದರು ಆರೋಪಿಸಿದರು.
‘ವಿಜಯೇಂದ್ರ ಅವರ ಈ ಹೋರಾಟ ಅಧಿಕಾರಕ್ಕಾಗಿ ನಡೆಯುತ್ತಿರುವ ಹೋರಾಟವಲ್ಲ. ರಾಜ್ಯದ ಜನರ ಹಿತಕ್ಕಾಗಿ, ರೈತರ ಬದುಕಿಗಾಗಿ, ಯುವಕರ ಭವಿಷ್ಯಕ್ಕಾಗಿ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟ. ಈ ಹೋರಾಟಕ್ಕೆ ಜನರ ಆಶೀರ್ವಾದ ಮತ್ತು ಬೆಂಬಲ ಮತ್ತಷ್ಟು ಶಕ್ತಿ ನೀಡುತ್ತಿದೆ’ ಎಂದು ಹೇಳಿದರು.ಬಳ್ಳಾರಿ ಚಲೋ ಪಾದಯಾತ್ರೆ ಬಳ್ಳಾರಿ ತಲುಪುವವರೆಗೆ ಮಾತ್ರ ಸೀಮಿತವಾಗುವುದಿಲ್ಲ. ಜನರ ಸಮಸ್ಯೆಗಳಿಗೆ ನ್ಯಾಯ ಸಿಗುವವರೆಗೆ ಬಿಜೆಪಿ ನಿರಂತರವಾಗಿ ಜನರ ಪರವಾಗಿ ಹೋರಾಟ ನಡೆಸಲಿದೆ ಎಂದು ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.